ಸಂಘಟನಾತ್ಮಕ ಚಟುವಟಿಕೆಗಳಿಗೆ ನಿಗದಿತ ಸಮಯದ ಸ್ಪಂದನೆ ಅಗತ್ಯ – ಕುಯಿಲಾಡಿ

ರಾಜ್ಯದಿಂದ ನಿಯಮಿತವಾಗಿ ಬರುವ ಸೂಚನೆಯಂತೆ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಅನುಷ್ಠಾನಕ್ಕೆ ಜಿಲ್ಲಾ, ಮೋರ್ಚಾ, ಮಂಡಲ ಸಹಿತ ಎಲ್ಲ ಸ್ತರಗಳ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ನಿಗದಿತ ಸಮಯದ ಸ್ಪಂದನೆ ಅಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳು ಸಂಘಟನಾತ್ಮಕ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷದ ವತಿಯಿಂದ ಫೆ.25ರಂದು ಜಿಲ್ಲಾ ಕಾರ್ಯ ತಂಡದ ಸಹಾಲ್ ಕಾರ್ಯಕ್ರಮ ಹಾಗೂ ಫೆ.26 ಮತ್ತು 27ರಂದು ಮಂಡಲವಾರು ಪ್ರಶಿಕ್ಷಣ ವರ್ಗ ನಡೆಯಲಿದೆ. ಜಿಲ್ಲಾ ಮತ್ತು ಮಂಡಲಗಳ ಕ್ರೀಡಾ ಕೂಟವು ಮಾ.26 ಮತ್ತು 27ರಂದು ನಡೆಯಲಿದೆ. ಕೇಂದ್ರ ಸರಕಾರ ನೀಡಿರುವ ಆತ್ಮ ನಿರ್ಭರ ಬಜೆಟ್‍ನ ಉತ್ತಮ ಅಂಶಗಳನ್ನು ಜನತೆಗೆ ತಲುಪಿಸುವ ಕಾರ್ಯ ನಡೆಯಬೇಕಿದೆ. ನೂತನ ಕೃಷಿ ಕಾಯ್ದೆಯನ್ನು ಬೆಂಬಲಿಸಿ ಪಕ್ಷದ ವತಿಯಿಂದ ಬೈಂದೂರಿನಿಂದ ಉಡುಪಿಯ ತನಕ ರೈತಪರ ಪಾದಯಾತ್ರೆ ನಡೆಯಲಿದೆ. ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪೂರ್ಣ ಪ್ರಮಾಣದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮುಂಬರಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮಗದೊಮ್ಮೆ ಜಿಲ್ಲೆಯಾದ್ಯಂತ ಬಿಜೆಪಿ ಭರ್ಜರಿ ವಿಜಯ ದಾಖಲಿಸುವಂತೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಸಾಧನೆ ಶ್ಲಾಘನೀಯ. ಅಯೋಧ್ಯೆಯ ಶ್ರೀ ರಾಮ ಮಂದಿರ ನಿಧಿ ಸಂಗ್ರಹ ಅಭಿಯಾನದಲ್ಲಿ ಉಡುಪಿ ಜಿಲ್ಲೆ ಮಂಗಳೂರು ವಿಭಾಗದಲ್ಲಿ ಮುಂಚೂಣಿಯಲ್ಲಿದೆ. ಪಕ್ಷದ ಸಂಘಟನಾತ್ಮಕ ಸೂತ್ರದಲ್ಲಿ ಯಾವುದೇ ರಾಜಿ ಇಲ್ಲ. ಇದರಿಂದಾಗಿ ಬಿಜೆಪಿ ಇತರ ರಾಜಕೀಯ ಪಕ್ಷಗಳಿಗಿಂತ ಬಿನ್ನವಾಗಿದೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಮಯದ ಇತಿಮಿತಿಯೊಳಗೆ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ವಿಜಯ ಪತಾಕೆಯನ್ನು ಇನ್ನಷ್ಟು ಎತ್ತರಕ್ಕೇರಿಸಲು ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ವಿಸ್ತ್ರತ ವಿವರ ಮಂಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಕಾರ್ಯ ವೈಖರಿಯನ್ನು ಮೆಚ್ಚಿ ಜೆಡಿಎಸ್ ಮುಖಂಡ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ದಿಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ಕಾಂಗ್ರೆಸ್ ಮುಖಂಡ, ಕಾಂಗ್ರೆಸ್ ಬೆಂಬಲಿತ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಇವರು ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾತ್ಮಕ ಪ್ರಕೋಷ್ಠಗಳಾದ ಮಾಧ್ಯಮ, ಸಾಮಾಜಿಕ ಜಾಲತಾಣ, ಪ್ರಶಿಕ್ಷಣ ಮತ್ತು ಪ್ರಕಾಶನ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.

Leave a comment

Design a site like this with WordPress.com
Get started