ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ : ಜಿಲ್ಲಾ ಬಿಜೆಪಿ

ಕಾರ್ಮಿಕ ಇಲಾಖೆಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮಂಜೂರಾಗಿರುವ ಆಹಾರ ಧಾನ್ಯಗಳ ಕಿಟ್ ಗಳ ದುರುಪಯೋಗವಾಗಿದೆ ಎಂಬ ಆರೋಪ ಕಾಂಗ್ರೆಸ್ ಪ್ರಾಯೋಜಿತ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪ ಅಂಚನ್ ರವರ ರಾಜಕೀಯ ಗಿಮಿಕ್ ಅಲ್ಲದೆ ಮತ್ತೇನಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ವಿರೋಧಿಗಳು ಬಿಟ್ಟಿ ಪ್ರಚಾರಕ್ಕಾಗಿ ಇಂತಹ ಆಧಾರ ರಹಿತ ಆರೋಪ ಮಾಡುವುದು ಸಹಜ. ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ ಎಂದು ಜಿಲ್ಲಾ ಬಿಜೆಪಿ ಹೇಳಿದೆ.

ಅಲೆವೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ್ ನಾಯಕ್ ರವರ ಮೇಲೆ ಪ್ರಸಕ್ತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪ ಅಂಚನ್ ಪೂರ್ವಾಪರ ತಿಳಿಯದೆ ಮಣಿಪಾಲ ಆರಕ್ಷಕ ಠಾಣೆಯಲ್ಲಿ ನೀಡಿರುವ ದೂರಿನ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಂತೆ ಅಲೆವೂರು ಗ್ರಾ.ಪಂ.ಗೂ ಕಾರ್ಮಿಕ ಇಲಾಖೆಯಿಂದ ಕಿಟ್ ಮಂಜೂರಾಗಿದ್ದು, 113 ಕಿಟ್ ಗಳನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲೇ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಈ ಬಗ್ಗೆ ಸೂಕ್ತ ದಾಖಲೆಗಳಿವೆ ಎಂಬ ಬಗ್ಗೆ ಈಗಾಗಲೇ ಅಲೆವೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ್ ನಾಯಕ್ ಸ್ಪಷ್ಟೀಕರಣ ನೀಡಿದ್ದಾರೆ.

ರಾಷ್ಟ್ರ ಮತ್ತು ರಾಜ್ಯದೆಲ್ಲೆಡೆ ಸುಳ್ಳನ್ನೇ ಪ್ರತಿಪಾದಿಸುತ್ತಾ ಬಂದಿರುವ ಕಾಂಗ್ರೆಸ್ ಇದೀಗ ಗ್ರಾಮ ಪಂಚಾಯತ್ ಮಟ್ಟದಲ್ಲೂ ಇಂತಹದೇ ಚಾಳಿಯನ್ನು ಮುಂದುವರಿಸಿರುವುದು ಶೋಚನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started