

ಸದ್ಯದಲ್ಲೇ ಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣಾ ದೃಷ್ಠಿಯಿಂದ ಪ್ರತೀ ಮಹಾ ಶಕ್ತಿಕೇಂದ್ರ ಶಹ ಬೂತ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ಸಮಾವೇಶ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿ ಎಂದು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಿಜೆಪಿ ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿ.ಪಂ., ತಾ.ಪಂ. ಚುನಾವಣಾ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಹಾ ಶಕ್ತಿಕೇಂದ್ರದ ಜೊತೆ ಜಿ.ಪಂ. ಮತ್ತು ತಾ.ಪಂ. ಸದಸ್ಯರ ಹೊಂದಾಣಿಕೆ ಅಗತ್ಯ. ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ವಿಧಾನಸಭಾ ಕ್ಷೇತ್ರವಾರು ಚುನಾವಣಾ ಪೂರ್ವಸಿದ್ಧತಾ ಕಾರ್ಯಗಳ ಪ್ರಯುಕ್ತ ನಿರಂತರವಾಗಿ ಸೇರಬೇಕು. ಬೂತ್ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಸೆ.30ರೊಳಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾವೇಶವನ್ನು ಆಯೋಜಿಸಬೇಕು. ಪಕ್ಷ ಸಂಘಟನೆಯ ಜೊತೆಗೆ ಪರಿಣಾಮಕಾರಿ ಚುನಾವಣಾ ಕಾರ್ಯತಂತ್ರಗಳ ಮೂಲಕ ಮುಂಬರಲಿರುವ ಎಲ್ಲಾ ಚುನಾವಣೆಗಳಲ್ಲಿ ಪ್ರಚಂಡ ವಿಜಯ ದಾಖಲಿಸಲು ಎಲ್ಲರೂ ಸಂಘಟಿತ ಶ್ರಮ ವಹಿಸಬೇಕು ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ ಇಂದು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರಗಳ ಅಭಿವೃದ್ಧಿ ಪರ ಆಡಳಿತವಿದೆ. ಬಿಜೆಪಿ ಮಗದೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಈ ಬಾರಿ ಕೇಂದ್ರ ಹಾಗೂ ರಾಜ್ಯದ ಮೂವರು ಸಚಿವರು ಇದ್ದಾರೆ. ಸಂಘಟನೆಯ ಮುಖಾಂತರ ಎಲ್ಲಾ ಚುನಾವಣೆಗಳನ್ನು ಎದುರಿಸಿ ಯಶಸ್ಸನ್ನು ಗಳಿಸಿದ ಅನುಭವವಿದೆ. ಸಂಘಟಿತ ಪ್ರಯತ್ನದಿಂದ ಮುಂದಿನ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ವಿಕ್ರಮ ವಿಜಯದ ಸಾಧನೆಗೈಯುವ ಮೂಲಕ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ಗುರಿಯೊಂದಿಗೆ ತೊಡಗಿಸಿಕೊಳ್ಳೋಣ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.