ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಉಡುಪಿ :ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಹಾಗೂ ಕಾಪು ಮಂಡಲ ಅಲ್ಪಸಂಖ್ಯಾತ ಮೋರ್ಚಾ ಇದರ ಜಂಟಿ ಆಶ್ರಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರದಿಂದ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ಶಿಬಿರವು ಸೆ.14ರಂದು ಮಹಿಳಾ ಮಂಡಲ ಕಟಪಾಡಿ ಇದರ ಸಭಾಂಗಣದಲ್ಲಿ ಜರಗಿತು.

ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಹಾಗೂ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಜತೆಯಾಗಿ ಜ್ಯೋತಿ ಬೆಳಗಿಸುವುದರ ಮೂಲಕ ಮಾಹಿತಿ ಶಿಬಿರವನ್ನು ಉದ್ಘಾಟಿಸಿದರು.

ಪ್ರಾಸ್ತಾವಿಕ ಮಾತನಾಡಿದ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್, ಬಿಜೆಪಿ ಯಾವತ್ತಿಗೂ ಅಲ್ಪಸಂಖ್ಯಾತರ ವಿರೋಧಿಯಲ್ಲ. ಇದಕ್ಕೆ ವೇದಿಕೆಯಲ್ಲಿರುವ ನಾವೆಲ್ಲರೂ ಉದಾಹರಣೆಯಾಗಿದ್ದು ಅತ್ಯಂತ ಗೌರವಯುತವಾಗಿ ಪಕ್ಷ ನಮ್ಮನ್ನು ನಡೆಸಿಕೊಂಡು ಮಹತ್ತರ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ‌ ಎಂದರು.

ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್ ಮಾತನಾಡಿ, ಅಲ್ಪಸಂಖ್ಯಾತರಿಗೆ ಸವಲತ್ತಿಗಾಗಿ ಅತೀ ಹೆಚ್ಚು ಅನುದಾನ ನಿಗದಿಪಡಿಸಲು ಪ್ರಾರಂಭಮಾಡಿದ್ದು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ. ಇಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಲ್ಪಸಂಖ್ಯಾತರಿಗೆ ಅತೀ ಹೆಚ್ಚು ಸವಲತ್ತುಗಳನ್ನು ನೀಡುವುದರ ಜೊತೆಗೆ ವಿವಿಧ ಜನಪರ ಯೋಜನೆಗಳನ್ನು ನೀಡಿದೆ. ಆದರೆ ಕಾಂಗ್ರೆಸ್ ಮಾತ್ರ ಅಲ್ಪಸಂಖ್ಯಾತರನ್ನು ವೋಟ್ ಬ್ಯಾಂಕಾಗಿ ಬಳಸಿಕೊಂಡು ಬಿಜೆಪಿಯ ಬಗ್ಗೆ ಭಯ ಹುಟ್ಟಿಸುವ ಕೆಲಸ ಮಾಡಿದ್ದು ಬಿಟ್ಟರೆ ಅಲ್ಪಸಂಖ್ಯಾತರ ಅಭಿವೃದ್ಧಿ ಮಾಡಲೇ ಇಲ್ಲ ಎಂದರು.

ಬಿ.ಕೆ. ಹ್ಯಾರಿಸ್ ಬಂಟ್ವಾಳರವರು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಲ್ಪಸಂಖ್ಯಾತರಿಗೆ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಸ್ತುವಾರಿ ನಯನಾ ಗಣೇಶ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಕಾಪು ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಮಹಮ್ಮದ್ ಆಲಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಆಸಿಫ್ ಕಟಪಾಡಿ, ಆಲ್ವಿನ್ ಡಿಸೋಜ, ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಅಪ್ಸರ್, ಕಾರ್ಯದರ್ಶಿ ಗ್ರೆಟ್ಟಾ ಮಸ್ಕರೇನಸ್ ಉಪಸ್ಥಿತರಿದ್ದರು.

ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಜೆರಾಲ್ಡ್ ಡಿಸೋಜ ಕಾರ್ಯಕ್ರಮ ನಿರೂಪಿಸಿ, ಬ್ಲಾಂಚ ಕರ್ನೆಲಿಯೋ ವಂದಿಸಿದರು.

Leave a comment

Design a site like this with WordPress.com
Get started