

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಬಿಜೆಪಿ ಸರಣಿ ಸಭೆಗಳು
ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ | ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ, ಕೋಟರವರ ದೊಡ್ಡ ಅಂತರದ ಗೆಲುವಿಗೆ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕಾರಣರಾಗುವ ಜೊತೆಗೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಕೈಜೋಡಿಸಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ ಮಾಡಿದರು.
ಅವರು ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಹಾಲಾಡಿ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಹಾಲಾಡಿ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಚುನಾವಣೆಯಲ್ಲಿ ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, ಪ್ರಥಮ ಪ್ರಾಶಸ್ತ್ಯದ ಒಂದೇ ಮತ ಚಲಾಯಿಸುವ ಅವಕಾಶವಿದೆ. ಗ್ರಾಮ ಪಂಚಾಯತ್ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣಕ್ಕೆ ಕಳೆದ 13 ವರ್ಷಗಳಿಂದ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ. 1992ರಲ್ಲಿ ರೂ.20 ರಷ್ಟಿದ್ದ ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನವನ್ನು ಕ್ರಮವಾಗಿ 250, 500 ಹಾಗೂ 1,000ಕ್ಕೆ ಏರಿಸಲು ಸರಕಾರದೊಂದಿಗೆ ನಿರಂತರ ಪ್ರಯತ್ನವನ್ನು ಮಾಡಿದ್ದೇನೆ. ಮಾತ್ರವಲ್ಲದೆ ಪ್ರಸಕ್ತ ಗೌರವ ಧನವನ್ನು ರೂ.2,000ಕ್ಕೆ ಹೆಚ್ಚಿಸುವ ಬಗ್ಗೆಯೂ ಸ್ವಪ್ರಯತ್ನದಿಂದ ಸರಕಾರದ ಮೂಲಕ ಪೂರ್ವಸಿದ್ಧತೆಯನ್ನು ನಡೆಸಲಾಗಿದೆ. ಡಿ.10ರಂದು ನಡೆಯುವ ಚುನಾವಣೆಯಲ್ಲಿ ಅತ್ಯಂತ ಜಾಗರೂಕತೆಯಿಂದ ನನ್ನ ಹೆಸರಿನ ಮುಂದೆ ಪ್ರಥಮ ಪ್ರಾಶಸ್ತ್ಯದ ಮತವನ್ನು 1 ಅಂಕೆಯನ್ನು ಮಾತ್ರ ಬರೆಯುವ ಮೂಲಕ ನನಗೆ ನೀಡಿ, ಹೆಚ್ಚಿನ ಅಂತರದ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಚಲಾಯಿಸಲಿರುವ ಮತಗಳ ಅಂಕಿ ಅಂಶಗಳ ಪ್ರಕಾರ ಕೋಟ ರವರ ಗೆಲುವು ನಿಶ್ಚಿತ. ಆದರೆ ಒಂದೇ ಒಂದು ಮತವೂ ಅಸಿಂಧು ಆಗದಂತೆ ಜಾಗರೂಕತೆಯಿಂದ ಮತ ಚಲಾಯಿಸುವ ಅವಶ್ಯಕತೆಯಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಬಿಜೆಪಿ ಬೆಂಬಲಿತ ಸದಸ್ಯರಿಗೆ ಮತದಾನದ ಪ್ರಾತ್ಯಕ್ಷಿಕೆಯನ್ನು ನಡೆಸಲಾಗುವುದು. ಡಿ.10ರಂದು ಮತದಾರರಾದ ಗ್ರಾಮ ಪಂಚಾಯತ್ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಶಹ ಒಂದಾಗಿ ಒಟ್ಟಾಗಿ ಸೇರಿ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ ಇರುವ ನಿಗದಿತ ಸ್ಥಳದಲ್ಲಿ 1 ಆಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿ, ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಅಭ್ಯುದಯಕ್ಕಾಗಿ ನಿರಂತರ ಶ್ರಮಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಂತ ಹೆಚ್ಚಿನ ಅಂತರದ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಮತದಾನದ ಪ್ರಕ್ರಿಯೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿ, ಡಿ.10ರಂದು ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳೀಯಾಡಳಿತ ಸಂಸ್ಥೆಗಳ ಬಿಜೆಪಿ ಬೆಂಬಲಿತ ಸದಸ್ಯರು ಬೆಳಿಗ್ಗೆ 8.00 ರಿಂದ 11.00 ಗಂಟೆಯೊಳಗೆ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಅತ್ಯಂತ ಜಾಗರೂಕತೆಯಿಂದ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಬಿಜೆಪಿಯ ಸಮರ್ಥ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನೀಡಿ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಕುಂದಾಪುರ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರ್, ಬಿಜೆಪಿ ಹಾಲಾಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಶಂಕರ ಮೊಗವೀರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು, ಪಕ್ಷದ ಪ್ರಮುಖರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
*ಎಲ್ಲಾ ಮಹಾ ಶಕ್ತಿಕೇಂದ್ರಗಳ ವ್ಯಾಪ್ತಿಯಲ್ಲಿ ಸರಣಿ ಸಭೆಗಳು:*
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕುಂದಾಪುರ ಮಂಡಲದ ವಿವಿಧ ಮಹಾ ಶಕ್ತಿ ಕೇಂದ್ರಗಳ ವ್ಯಾಪ್ತಿಯಲ್ಲಿ ನಡೆದ ಪೂರ್ವಭಾವಿ ಸಭೆಗಳಲ್ಲಿ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ಮಂದರ್ತಿಯ ವಿಖ್ಯಾತ್ ಶೆಟ್ಟಿ, ಸಾಲಿಗ್ರಾಮದ ಜಯೇಂದ್ರ ಪೂಜಾರಿ, ಕೋಟದ ಸುರೇಶ್ ಕುಂದರ್, ಕುಂದಾಪುರದ ರಾಜೇಶ್ ಕಡ್ಗಿಮನೆ, ಕೋಟೇಶ್ವರದ ಕೃಷ್ಣ ಗೊಲ್ಲ, ಬೀಜಾಡಿಯ ಪ್ರಶಾಂತ್ ಶೆಟ್ಟಿ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರಳೆ, ಪ್ರಮುಖರಾದ ರಾಜು ಪೂಜಾರಿ ಕಾರ್ಕಡ, ಶಿವರಾಮ ಉಡುಪ, ರಾಮಚಂದ್ರ ಉಪಾಧ್ಯ ಮುಂತಾದವರು ಉಪಸ್ಥಿತರಿದ್ದರು.