
ಉಡುಪಿ: ದ.ಕ. ಜಿಲ್ಲಾ ಬಿಜೆಪಿಯ ಭೀಷ್ಮರೆನಿಸಿಕೊಂಡಿದ್ದ ಜನಸಂಘದ ಹಿರಿಯ ನಾಯಕ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ವೃತ್ತಿಯಲ್ಲಿ ವಕೀಲರಾಗಿ, ಪ್ರವೃತ್ತಿಯಲ್ಲಿ ಮೌಲ್ಯಾಧಾರಿತ ರಾಜಕಾರಿಣಿಯಾಗಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿ, ಪ್ರೇರಣಾ ಶಕ್ತಿಯಾಗಿ ಪಕ್ಷ ಸಂಘಟನೆಯಲ್ಲಿ ಕೆ.ರಾಮ ಭಟ್ ರವರ ಪಾತ್ರ ಅತ್ಯಂತ ಹಿರಿದು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.