
ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಕಳೆದ 13 ವರ್ಷಗಳಿಂದ ಮೇಲ್ಮನೆ ಶಾಸಕರಾಗಿ, ಸಚಿವರಾಗಿ ಪರಿಣಾಮಕಾರಿ ಹೆಜ್ಜೆಗಳ ಮೂಲಕ ಅಧಿಕಾರ ವಿಕೇಂದ್ರೀಕರಣ ಹಾಗೂ ಪಂಚಾಯತ್ ರಾಜ್ ಮತ್ತು ನಗರಾಡಳಿತ ವ್ಯವಸ್ಥೆಯ ಬಲವರ್ಧನೆಯ ಜೊತೆಗೆ ಸದಸ್ಯರ ಗೌರವಧನ ಹೆಚ್ಚಿಸುವಲ್ಲಿ ಶ್ರಮ ವಹಿಸಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. ಡಿ.10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ದ.ಕ. ಮತ್ತು ಉಡುಪಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಏಕೈಕ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅವರ ಹೆಸರಿನ ಮುಂದೆ ಇರುವ ಸ್ಥಳದಲ್ಲಿ ಸ್ಪಷ್ಟವಾಗಿ I ಎಂದು ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರಲ್ಲಿ ವಿನಂತಿಸಿದ್ದಾರೆ.
ಸಾಮಾನ್ಯ ಕುಟುಂಬದಿಂದ ಬಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿ, ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ, ಮೂರು ಬಾರಿ ಸಚಿವರಾಗಿ ಸಾರ್ಥಕ ಜನಸೇವೆಗೈದಿದ್ದಾರೆ.
ಕೋಟರವರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಮಾಸಿಕ ರೂ.20ರಷ್ಟಿದ್ದ ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನವನ್ನು ಹಂತ ಹಂತವಾಗಿ ರೂ.250, ರೂ.500 ಹಾಗೂ ರೂ.1,000ಕ್ಕೆ ಹೆಚ್ಚಿಸುವಲ್ಲಿ ಸರಕಾರದ ಜೊತೆ ನಿರಂತರ ಶ್ರಮ ವಹಿಸಿರುವ ಕೋಟ ಶ್ರೀನಿವಾಸ ಪೂಜಾರಿಯವರು ಮುಂದಿನ ದಿನಗಳಲ್ಲಿ ಗೌರವ ಧನವನ್ನು ರೂ.2,000ಕ್ಕೆ ಏರಿಸುವಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಅತ್ಯಂತ ವ್ಯವಸ್ಥಿತವಾಗಿ ಪೂರ್ವಸಿದ್ಧತೆಗಳು ನಡೆದಿವೆ. ಈಗಾಗಲೇ ಜಿಲ್ಲಾ, ಮಂಡಲ ಮತ್ತು ಮಹಾ ಶಕ್ತಿಕೇಂದ್ರಗಳ ಮಟ್ಟದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಪದಾಧಿಕಾರಿಗಳ ಸಭೆಗಳನ್ನು ಚುನಾವಣಾ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನಿಲ್ ವಿ. ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಮ್. ಸುಕುಮಾರ ಶೆಟ್ಟಿ ಮತ್ತು ಪಕ್ಷದ ಮುಖಂಡರ ನೇತೃತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಆಯೋಜಿಸಲಾಗಿದೆ. ಗ್ರಾಮ ಪಂಚಾಯತ್ ವಾರು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಶಹ ಬಿಜೆಪಿ ಬೆಂಬಲಿತ ಸದಸ್ಯರಿಗೆ ಮತದಾನದ ಪ್ರಾತ್ಯಕ್ಷಿಕೆಯನ್ನು ನಡೆಸಲಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಶೇಕಡಾ ನೂರರಷ್ಟು ಮತದಾನದ ಗುರಿಯನ್ನು ಹೊಂದಲಾಗಿದ್ದು, ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗರಿಷ್ಠ ಬಹುಮತದಿಂದ ಚುನಾಯಿತರಾಗಿ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.