ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗದ ಸಭೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಾಧ್ಯಮ ವಿಭಾಗದ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಮಾ.28ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಬಿಜೆಪಿ ರಾಜ್ಯ ಮಾಧ್ಯಮ ಪ್ರಕೋಷ್ಠದ ಸದಸ್ಯ ರಮೇಶ್ ರತನ್ ಪೂಜಾರಿಯವರು ಮಾತನಾಡಿ ಜಿಲ್ಲಾ ಮಾಧ್ಯಮ ವಿಭಾಗ ಮತ್ತು ಜಿಲ್ಲಾ ವಕ್ತಾರರು, ಸಹ ವಕ್ತಾರರ ಜವಾಬ್ದಾರಿ ಹಾಗೂ ಸಮನ್ವಯತೆಯ ಮಹತ್ವವನ್ನು ವಿವರಿಸಿ, ಮಂಡಲ ಮಾಧ್ಯಮ ವಿಭಾಗದ ಪರಿಣಾಮಕಾರಿ ನಿರ್ವಹಣೆಯ ಔಚಿತ್ಯದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಮಹತ್ವಪೂರ್ಣವಾಗಿದೆ. ಪಕ್ಷದ ಮಾಧ್ಯಮ ವಿಭಾಗ ಮತ್ತು ಪಕ್ಷದ ಮುಖವಾಣಿ ವಕ್ತಾರರು ಅತ್ಯಂತ ಕ್ರಿಯಾಶೀಲತೆಯಿಂದ ಸಮಯದ ಇತಿಮಿತಿಯೊಳಗೆ ಕರ್ತವ್ಯ ನಿರ್ವಹಿಸುವ ಅನಿವಾರ್ಯತೆ ಇದೆ. ಜಿಲ್ಲಾ ಮಾಧ್ಯಮ ವಿಭಾಗದ ಜೊತೆಗೆ ಮಂಡಲಗಳ ಮಾಧ್ಯಮ ಸಮಿತಿಯು ಸಕ್ರಿಯವಾಗಿ ತೊಡಗಿಸಿಕೊಂಡಾಗ ಪಕ್ಷದ ಮಾಧ್ಯಮ ವಿಭಾಗವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ ಎಂದರು.

ಮಂಡಲಗಳ ಮಾಧ್ಯಮ ಸಮಿತಿಯನ್ನು ಸಕ್ರಿಯಗೊಳಿಸಿ ಶೀಘ್ರದಲ್ಲಿ ಜಿಲ್ಲಾ ಮಾಧ್ಯಮ ವಿಭಾಗದ ಕಾರ್ಯಾಗಾರವನ್ನು ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಮಂಡಲಗಳ ಮಾಧ್ಯಮ ಸಂಚಾಲಕರು, ಸಹ ಸಂಚಾಲಕರು ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started