ಪಕ್ಷ ಸಂಘಟನೆಗೆ ವೇಗ ನೀಡಲು ಕೆ.ಉದಯ ಕುಮಾರ್ ಶೆಟ್ಟಿ ಕರೆ

ಬಿಜೆಪಿ ಜಿಲ್ಲಾ ಸಂಘಟನಾತ್ಮಕ ತಂಡದ ಸಭೆ


ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಒಂಬತ್ತು ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಿಂದ ಬೂತ್ ಹಾಗೂ ಪೇಜ್ ಪ್ರಮುಖರ ವರೆಗಿನ ವಿವಿಧ ಮಜಲುಗಳಲ್ಲಿ ಪಕ್ಷ ಸಂಘಟನೆಯ ಕಾರ್ಯ ವಿಸ್ತಾರದ ಪರಿಶೀಲನೆಯನ್ನು ನಡೆಸಿ ವಿವಿಧ ಮೋರ್ಚಾಗಳು ಮತ್ತು ಪ್ರಕೋಷ್ಠಗಳ ಎಲ್ಲಾ ಹಂತಗಳ ಸಂಘಟನಾ ಸಮಿತಿಯನ್ನು ಸಕ್ರಿಯಗೊಳಿಸಿ ಚುನಾವಣಾ ಪೂರ್ವಸಿದ್ಧತೆಗಳೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ರಾಜ್ಯ ಸಂಘಟನಾತ್ಮಕ ತಂಡದ ಸದಸ್ಯ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಸಂಘಟನಾತ್ಮಕ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿ ಅಗತ್ಯ ಮಾಹಿತಿ ಮಾರ್ಗದರ್ಶನ ನೀಡಿದರು.

ಜಿಲ್ಲೆಯಾದ್ಯಂತ ನಡೆಯುವ ಎಲ್ಲಾ ಸಂಘಟನಾತ್ಮಕ ಕೆಲಸ ಕಾರ್ಯಗಳಿಗೆ ಜಿಲ್ಲಾ ಮತ್ತು ಮಂಡಲಗಳ ಸಂಘಟನಾತ್ಮಕ ತಂಡಗಳು ಪೂರಕವಾಗಿ ಸ್ಪಂದಿಸಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಸೆ.17ರಿಂದ ಅ.2ರ ವರೆಗೆ ಪಕ್ಷದ ವತಿಯಿಂದ ಜಿಲ್ಲೆಯಾದ್ಯಂತ ‘ಸೇವಾ ಪಾಕ್ಷಿಕ’ವನ್ನು ಆಚರಿಸಲಾಗುವುದು. ಸೆ.17 ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ, ಸೆ.25 ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನ, ಅ.2 ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನ. ಈ ಎಲ್ಲಾ ಕಾರ್ಯಕ್ರಮಗಳನ್ನು ವಿವಿಧ ಸೇವಾ ಚಟುವಟಿಕೆಗಳ ಮೂಲಕ ಶಕ್ತಿ ಕೇಂದ್ರ ಮಟ್ಟದಲ್ಲಿ ವ್ಯವಸ್ಥಿತವಾಗಿ ಆಚರಿಸಬೇಕು. ಈ ಪ್ರಯುಕ್ತ ನಡೆಯುವ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರಗಳು, ಕೆರೆ ಬಾವಿ ನದಿಗಳ ಸ್ವಚ್ಛತಾ ಅಭಿಯಾನ, ಮಳೆ ನೀರನ್ನು ಸಂಗ್ರಹಿಸಿ ‘ಅಮೃತ ಸರೋವರ’ ನಿರ್ಮಾಣದಂತಹ ಉದಾತ್ತ ಸೇವಾ ಚಟುವಟಕೆಗಳಲ್ಲಿ ಪಕ್ಷದ ಪ್ರಮುಖರು ಹಾಗೂ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ತೊಡಗಿಸಿಕೊಂಡು ‘ಸೇವಾ ಪಾಕ್ಷಿಕ’ವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ರವಿ ಅಮೀನ್, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಗುರು ಪ್ರಸಾದ್ ಶೆಟ್ಟಿ ಕಟಪಾಡಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಕುಂದಾಪುರ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಅರುಣ ಬಾಣ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಸಹಕಾರಿ ಪ್ರಕೋಷ್ಠ ಸಂಚಾಲಕ ಮುರಳೀಧರ ಪೈ, ಉಡುಪಿ ಗ್ರಾಮಾಂತರ ಮಂಡಲ ಅಧ್ಯಕ್ಷೆ ವೀಣಾ ವಿ. ನಾಯ್ಕ್, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಹಾಗೂ ಜಿಲ್ಲಾ ಮತ್ತು ಮಂಡಲಗಳ ಸಂಘಟನಾತ್ಮಕ ತಂಡದ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಸದಾನಂದ ಉಪ್ಪಿನಕುದ್ರು ವಂದಿಸಿದರು.

Leave a comment

Design a site like this with WordPress.com
Get started