‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ

News by: ಜನತಾಲೋಕವಾಣಿನ್ಯೂಸ್



ಉಡುಪಿ: ಬಿಲ್ಲವ, ಈಡಿಗ, ನಾಮದಾರಿ ಸಹಿತ 26 ಉಪ ಪಂಗಡಗಳ ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನು ಡಿ.5ರಂದು ಘೋಷಿಸಿರುವ ಐತಿಹಾಸಿಕ ನಿರ್ಣಯ ಅಭಿನಂದನೀಯ ಎಂದು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಈ ಹಿಂದೆ ಸದ್ರಿ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಒಂದು ಪ್ರತ್ಯೇಕ ಕೋಶದ ರಚನೆ ಸಹಿತ ಪ್ರತ್ಯೇಕ ಕಾರ್ಪಸ್ ಫಂಡ್ ಕಾದಿರಿಸಿ ಸ್ಥಾಪಿಸಲಾಗಿರುವ ‘ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ’ವನ್ನು ಪರಿವರ್ತಿಸಿ ಇದೀಗ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನಾಗಿ ಘೋಷಿಸುವ ಜೊತೆಗೆ ಮುಂದಿನ ಆಯ ವ್ಯಯದಲ್ಲಿ ಸೂಕ್ತ ಅನುದಾನವನ್ನು ಮೀಸಲಿಡುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಮುದಾಯದ ಪರವಾಗಿ ಹಾರ್ದಿಕ ಅಭಿನಂದನೆಗಳು.

ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನವನ್ನು ನಡೆಸಿರುವ ಸಮುದಾಯದ ಸಚಿವರು, ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು, ಉಡುಪಿ ಸಹಿತ ಜಿಲ್ಲೆಯ ಎಲ್ಲ ಶಾಸಕರು, ಸಮುದಾಯದ ಸ್ವಾಮೀಜಿಗಳು ಹಾಗೂ ಮುಖಂಡರು, ಸಮುದಾಯದ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಮತ್ತು ಸಮಸ್ತ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಸಮಾಜ ಬಾಂಧವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started