ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ


ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳ ಭರ್ಜರಿ ಗೆಲುವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯ ತಂಡ ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿಯನ್ನು ಬೆಂಬಲಿಸಿ ಮಗದೊಮ್ಮೆ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನತೆ ಅಭಿವೃದ್ಧಿ ಮತ್ತು ಹಿಂದುತ್ವದ ಪರ ವಿಶ್ವಾಸದ ಮುದ್ರೆ ಒತ್ತಿದ್ದಾರೆ. ಈ ಗೆಲುವು ಪಕ್ಷದ ಕಾರ್ಯಕರ್ತರ ಗೆಲುವು. ಈ ವಿಜಯ ಯಾತ್ರೆ ಮುಂಬರಲಿರುವ ಲೋಕ ಸಭೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಿತ ಎಲ್ಲಾ ಸ್ತರದ ಚುನಾವಣೆಗಳಲ್ಲಿಯೂ ಮುಂದುವರಿದು ಮೇಳೈಸಲಿದೆ ಎಂದು ಕುಯಿಲಾಡಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿಯ ನೂತನ ಶಾಸಕ ಯಶ್ಪಾಲ್ ಎ. ಸುವರ್ಣ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ವಿಸ್ತ್ರತವಾಗಿ ಮಾತನಾಡಿ ಉಡುಪಿ ಜಿಲ್ಲೆಯನ್ನು ಮಗದೊಮ್ಮೆ ಪರಿಪೂರ್ಣ ಬಿಜೆಪಿ ಜಿಲ್ಲೆಯನ್ನಾಗಿಸಿದ ಮತದಾರ ಬಾಂಧವರಿಗೆ ಮತ್ತು ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ ವಿಭಾಗಗಳ ಸಂಚಾಲಕರು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ವಿಧಾನಸಭಾ ಚುನಾವಣೆಯ ಯಶಸ್ವೀ ನಿರ್ವಹಣೆ ಹಾಗೂ ಭರ್ಜರಿ ವಿಜಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಜಿಲ್ಲಾಧ್ಯಕ್ಷರು ಮತ್ತು ಇಡೀ ತಂಡವನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಹಾಗೂ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ ವಿಭಾಗಗಳ ಸಂಚಾಲಕರು ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started