ರಾಜ್ಯ ಸರಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ



ಉಡುಪಿ: ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ಹಣವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಮತ್ತು ಎಸ್ಟಿ ಮೋರ್ಚಾ ವತಿಯಿಂದ ಉಡುಪಿ-ಅಜ್ಜರಕಾಡು ಸೈನಿಕರ ಹುತಾತ್ಮ ಭವನದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ಮತ್ತು ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರಕಾರ ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಗ್ಯಾರಂಟಿಗಳಿಗೆ ವರ್ಗಾಯಿಸಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ರಾಜ್ಯ ಸರಕಾರ ತಕ್ಷಣ ನಿಗದಿತ 11,000 ಕೋಟಿ ರೂಪಾಯಿ ಮೊತ್ತವನ್ನು ದಲಿತ ಸಮುದಾಯದ ಅಭಿವೃದ್ಧಿಗಾಗಿ ಮರು ಕಾಯ್ದಿರಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರಕಾರ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಅಧಿಕಾರ ಪಡೆಯಲೇಬೇಕೆಂಬ ಗೀಳಿನಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿರುವ ಉಚಿತಗಳ ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೆ ಪರದಾಡುತ್ತಿರುವ ಸರಕಾರ ರಾಜ್ಯವನ್ನು ದಿವಾಳಿಯ ಅಂಚಿಗೆ ತಂದಿಡುವ ಜೊತೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಎಲ್ಲ ವರ್ಗಗಳ ಗ್ಯಾರಂಟಿ ಪೂರೈಕೆಗೆ ವಿನಿಯೋಗಿಸುವ ಹುನ್ನಾರದಲ್ಲಿ ತೊಡಗಿರುವುದು ಸಾಮಾಜಿಕ ನ್ಯಾಯದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷರಾದ ಆನಂದ ಮಟಪಾಡಿ, ನಾರಾಯಣ ಗುಜ್ಜಾಡಿ, ಪ್ರ.ಕಾರ್ಯದರ್ಶಿಗಳಾದ ಸದಾನಂದ ಕೈಪುಂಜಾಲು, ಕೃಷ್ಣಮೂರ್ತಿ ಡಿ.ಬಿ., ಜಿಲ್ಲಾ ಎಸ್ಟಿ ಮೋರ್ಚಾ ಪ್ರ.ಕಾರ್ಯದರ್ಶಿ ಪ್ರಭಾಕರ ವಿ., ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಒಬಿಸಿ ಮೋರ್ಚಾ ಪ್ರ.ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಸಾಮಾಜಿಕ ಜಾಲತಾಣದ ಚಂದ್ರಶೇಖರ್ ಪ್ರಭು, ಬಿಜೆಪಿ ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ, ಕಾಪು ಮಂಡಲ ಪ್ರ.ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉಡುಪಿ ಮಂಡಲ ಪ್ರ.ಕಾರ್ಯದರ್ಶಿ ದಿನೇಶ್ ಅಮೀನ್, ಎಸ್ಸಿ ಮೋರ್ಚಾ ಉಡುಪಿ ನಗರಾಧ್ಯಕ್ಷ ಕಿರಣ್, ಪ್ರ.ಕಾರ್ಯದರ್ಶಿ ರಾಜೇಂದ್ರ, ಬೈಂದೂರು ಅಧ್ಯಕ್ಷ ಚಂದ್ರ ಪಂಚವಟಿ, ಕಾರ್ಕಳ ಅಧ್ಯಕ್ಷ ಅಣ್ಣಿ, ಕಾಪು ಅಧ್ಯಕ್ಷ ನಾಗೇಂದ್ರ, ಪ್ರ.ಕಾರ್ಯದರ್ಶಿಗಳಾದ ಪಾರ್ಥಸಾರಥಿ, ಶ್ರೀನಿವಾಸ್ ಮಲ್ಲಾರ್, ಕುಂದಾಪುರ ಪ್ರ.ಕಾರ್ಯದರ್ಶಿ ಮಹೇಶ್ ಎಮ್.ಬಿ. ಹಾಗೂ ಎಸ್ಸಿ ಮೋರ್ಚಾ ಮತ್ತು ಎಸ್ಟಿ ಮೋರ್ಚಾ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started