
ಉಡುಪಿ, ನ.29: ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಉಡುಪಿಯ ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನ.30ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದಾರೆ.
ಅಂಬಲಪಾಡಿ ಗ್ರಾಮ ಪಂಚಾಯತ್ ಆವರಣದಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ನಡೆಯಲಿದೆ.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಲ್ಲೆಯ ಇತರ ಶಾಸಕರು ಭಾಗವಹಿಸಲಿದ್ದಾರೆ.
ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದೆ.
ಈ ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.
ಆಯುಷ್ಮಾನ್ ಭಾರತ್, ಪಿಎಂ ಉಜ್ವಲ ಯೋಜನೆ, ಪಿಎಂ ಕಿಸಾನ್ ಸಮ್ಮಾನ್, ಜನಧನ್ ಯೋಜನಾ, ಸುರಕ್ಷಾ ಬಿಮಾ ಯೋಜನೆಗಳು ಸೇರಿದಂತೆ 17 ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡುವುದಲ್ಲದೇ ಸ್ಥಳದಲ್ಲೇ ಆಯ್ದ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಾಗುವುದು.
ಈಗಾಗಲೇ ಪ್ರಯೋಜನ ಪಡೆದಿರುವ ಫಲಾನುಭವಿಗಳು ‘ಮೇರಾ ಕಹಾನಿ, ಮೇರಾ ಜುಬಾನಿ’ ಎನ್ನುವ ಕಾರ್ಯಕ್ರಮದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.