
*”ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು”ಎಂದ ಐವನ್ ಡಿ’ಸೋಜಾ ವಿರುದ್ಧ ಯಾವುದೇ ಕ್ರಮವಿಲ್ಲ…! ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! ಪೋಲೀಸ್ ಇಲಾಖೆ ಒಂದು ಪಕ್ಷದ ಕೈಗೊಂಬೆಯಾಗಿದೆ!! – ಶಶಾಂಕ್ ಶಿವತ್ತಾಯ ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ*
ಕುಂದಾಪುರದ ಪ್ರಥಮ ದರ್ಜೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ.ಜಿ. ರಾಮಕೃಷ್ಣ ಅವರಿಗೆ ಘೋಷಿಸಲಾಗಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಾಣದ ಕೈಗಳ ಒತ್ತಡಕ್ಕೆ ಮಣಿದ ಸರ್ಕಾರ ಘೋಷಿಸಿರುವ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮಣಿಪಾಲದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಸಹಿತ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹಾಗೂ ಇತರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಉಡುಪಿ ಜಿಲ್ಲಾ ಯುವ ಮೋರ್ಚಾ ಬಲವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3 ವಾರಗಳ ಹಿಂದೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರ ಮೇಲೆ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ಆದೇಶವನ್ನು ವಿರೋಧಿಸುವ ಸಂಧರ್ಭದಲ್ಲಿ ರಾಜ್ಯಪಾಲರು ತಮ್ಮ ಆದೇಶ ಹಿಂಪಡೆಯದೆ ಇದ್ದಲ್ಲಿ ಬಾಂಗ್ಲಾ ದೇಶದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎನ್ನುವಂತಹ ದೇಶದ ಆಂತರಿಕ ಭದ್ರತೆಯನ್ನು ದುರ್ಭಲಗೊಳಿಸುವಂತಹ ಹಾಗೂ ದೇಶವಿರೋಧಿ ಮಾನಸಿಕತೆಯ ಜನರನ್ನು ಉದ್ರೇಕಿಸುವಂತಹ ತುಚ್ಚ ಹೇಳಿಕೆ ನೀಡಿದ್ದರು. ಈ ಬಗ್ಗೆ ಉಡುಪಿ ಜಿಲ್ಲಾ ಯುವಮೋರ್ಚಾ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಉಡುಪಿ ಜಿಲ್ಲೆಯಾದ್ಯಂತ ಹಲವಾರು ದೂರುಗಳು ದಾಖಲುಗೊಂಡರೂ ಈವರೆಗೆ ಅವರ ವಿರುದ್ಧ ಯಾವುದೇ ಠಾಣೆಯಲ್ಲಿಯೂ ಒಂದೇ ಒಂದು FIR ದಾಖಲಾಗಿಲ್ಲ. ಹಾಗಾದರೆ ರಾಜ್ಯದ ಪೊಲೀಸ್ ಇಲಾಖೆ ಒಂದು ಪಕ್ಷದ ಕೈಗೊಂಬೆಯಾಗಿದೆ ಎನ್ನುವುದರಲ್ಲಿ ಸಂಶಯವಿಲ್ಲ.
ಈ ಹಿಂದೆ ರಾಜ್ಯದಾದ್ಯಂತ ಸುದ್ದಿ ಮಾಡಿದ್ದ ಹಿಜಾಬ್ ಗೊಂದಲದ ಸಮಯದಲ್ಲಿ ಕಾಲೇಜಿನಲ್ಲಿ ಸರ್ಕಾರದ ಆದೇಶದಂತೆ ಕಾನೂನು ಪಾಲನೆ ಮಾಡಿದ್ದರು ಎನ್ನುವ ಕಾರಣಕ್ಕೆ ಘೋಷಿಸಿದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ತಡೆ ಹಿಡಿದಿರುವುದು ಅತ್ಯಂತ ಖೇದಕರ. ಈ ಬಗ್ಗೆ ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಿದವರ ಮೇಲೆಯೇ ಕೇಸು ದಾಖಲಿಸಿರುವುದು ನಿಜವಾದ ಸಂವಿಧಾನದ ಕಗ್ಗೊಲೆಯಾಗಿದೆ. ಎಷ್ಟೇ ಕೇಸುಗಳನ್ನು ದಾಖಲಿಸಿದರೂ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.