ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹ, ಗ್ರಾಮ ಚಲೋ, ಅಯೋಧ್ಯಾ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದ ಕುರಿತು ಸಂಬಂಧಪಟ್ಟ ಜವಾಬ್ದಾರಿಗಳ ಪ್ರಮುಖರ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ: ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಡುಪಿಯ ಕಡಿಯಾಳಿಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್ ಬನ್ನಂಜೆ, ಪೆರಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಕಟ್ಟಡ ಮಾಲಕ ಮುರಳೀಧರ ಪೈ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರ.ಕಾರ್ಯದರ್ಶಿ ಅಲ್ವಿನ್ ಡಿಸೋಜಾ, ಬಿಜೆಪಿ ಉಡುಪಿ ನಗರ ಪ್ರ.ಕಾರ್ಯದರ್ಶಿ ದಿನೇಶ್ ಅಮೀನ್, ಗ್ರಾಮಾಂತರ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಮುಖರಾದ ರಾಧಾಕೃಷ್ಣ ಶೆಟ್ಟಿ, ದಿನಕರ ಪೂಜಾರಿ, ಕಿಶೋರ್ ಕರಂಬಳ್ಳಿ ಮುoತಾದವರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಇದರ ನೂತನ ಜಿಲ್ಲಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಕಿಶೋರ್ ಕುಮಾರ್ ಕುಂದಾಪುರ ಇವರು ಜ.22 ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಜ.22ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1.00ರ ವರೆಗೆ “ಶ್ರೀ ರಾಮೋತ್ಸವ” ಕಾರ್ಯಕ್ರಮವು ‘ಶ್ರೀ ಭವಾನಿ ಮಂಟಪ’ದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9.30ಕ್ಕೆ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಜ್ಯೋತಿ ಬೆಳಗಿಸಿ “ಶ್ರೀ ರಾಮೋತ್ಸವ”ಕ್ಕೆ ಚಾಲನೆ ನೀಡಲಿದ್ದಾರೆ.
ಭಜನೆ, ಹನುಮಾನ್ ಚಾಲೀಸ್ ಮತ್ತು ಶ್ರೀ ರಾಮ ರಕ್ಷಾ ಸ್ತೋತ್ರ ಸಾಮೂಹಿಕ ಪಠಣ, ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆ, ಮಹಾ ಪೂಜೆ ಮತ್ತು ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಆರಾಧ್ಯಮೂರ್ತಿ ನಾದ ಬ್ರಹ್ಮ ಪಾಂಡುರಂಗ ವಿಠಲನಿಗೆ ಅತ್ಯಂತ ಪ್ರಿಯವಾದ ಭಜನೆ ಸನ್ನಿದಾನದಲ್ಲಿ ನಿರಂತರವಾಗಿ ನಡೆಯುತ್ತಿದೆ. ಭಜನೆಯಿಂದ ಭಗವಂತನು ಸಂತುಷ್ಟನಾಗಿ ನಮ್ಮೆಲ್ಲರನ್ನು ಅನುಗ್ರಹಿಸಲಿ. ಇಂತಹ ಭಜನಾ ಕಾರ್ಯಕ್ರಮ ಎರಡು ವರ್ಷಗಳ ಸಮಯದಲ್ಲಿ ನಿರಂತರವಾಗಿ ನಡೆಯಲಿ. ಭಜನಾ ಸಂಘಗಳು ಬೆಳೆಯಲಿ. ಎಲ್ಲ ಮನೆಗಳಲ್ಲಿ ನಿರಂತರ ಭಜನೆ ಆಗುವಂತಾಗಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅವರು ಹೇಳಿದರು.
ಅವರು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೇತೃತ್ವದಲ್ಲಿ ಪರ್ಯಾಯೋತ್ಸವದ ಪ್ರಯುಕ್ತ ಉಡುಪಿ ರಥ ಬೀದಿಯ ಆನಂದ ತೀರ್ಥ ಮಂಟಪದಲ್ಲಿ ನಡೆದ ಭಜನಾ ಸೇವೆಗೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿ ಶುಭಾಶಂಸನೆಗೈದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಇದರ ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು ಮಾತನಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೂತನ ಸಮಿತಿಯು ನಾಡ ಹಬ್ಬ ಪರ್ಯಾಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ರಥ ಬೀದಿಯಲ್ಲಿ ಭಜನಾ ಸೇವೆಯನ್ನು ಆಯೋಜಿಸಿರುವುದು ಸಕಾಲಿಕ ಮತ್ತು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇನ್ನಷ್ಟು ವೈವಿಧ್ಯಮಯ ಭಜನಾ ಕಾರ್ಯಕ್ರಮಗಳು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಉಡುಪಿ ತಾಲೂಕು ಭಜನಾ ಪರಿಷತ್ ಮೂಲಕ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಪರ್ಯಾಯೋತ್ಸವ ಸ್ವಾಗತ ಸಮಿತಿಯ ಪ್ರಮುಖರಾದ ರವೀಂದ್ರ ಆಚಾರ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಉಪಾಧ್ಯಕ್ಷರಾದ ವಜ್ರಾಕ್ಷಿ ಪಿ. ದಾಸ್ ಕಡಿಯಾಳಿ, ಸುಮಿತ್ರಾ ನಾಯ್ಕ್ ಪೆರಂಪಳ್ಳಿ, ಕೋಶಾಧಿಕಾರಿ ಪೂರ್ಣಿಮಾ ಪೆರ್ಡೂರು, ವಲಯಗಳ ಸಂಯೋಜಕರಾದ ಗೀತಾ ರವಿಚಂದ್ರ ಚಿಟ್ಪಾಡಿ, ಶಾಂಭವಿ ಕುಲಾಲ್ ಪೆರ್ಡೂರು, ಗೀತಾ ಪೆರಂಪಳ್ಳಿ, ಗಿರೀಶ್ ಅಮೀನ್ ಕಿದಿಯೂರು, ಯೋಜನೆಯ ವಿಮಾ ವಿಭಾಗದ ಅಧಿಕಾರಿ ರಮೇಶ್ ಹಾಗೂ ಉಡುಪಿ ತಾಲೂಕಿನ ವಿವಿಧ ವಲಯಗಳ ಭಜನಾ ಮಂಡಳಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಉಡುಪಿ: ಪಂಚ ಗ್ಯಾರoಟಿಗಳ ಆಮಿಷವೊಡ್ಡಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ಜನತೆಯ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್ಸಿನ ಗೋಸುoಬೆತನದ ನಡೆಯಿಂದ ರೋಸಿ ಹೋಗಿರುವ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದೂ ಉಚಿತ ಗ್ಯಾರಂಟಿಗಳನ್ನು ಯಾವುದೇ ಬದಲಾವಣೆ ಇಲ್ಲದೆ ಯಥಾವತ್ತಾಗಿ ಜಾರಿಗೆ ತಂದಲ್ಲಿ ತನ್ನ ತಲೆ ಬೋಳಿಸುವುದಾಗಿ ಹೇಳಿಕೆ ನೀಡಿದ್ದ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ತನ್ನ ಮಾತಿಗೆ ಈಗಲೂ ಬದ್ದರಾಗಿದ್ದಾರೆ. ಆದರೆ ತನ್ನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಐದೂ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸುತ್ತೇನೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬಳಿಕ ಯೂ ಟರ್ನ್ ಹೊಡೆದು ಎಲ್ಲಾ ಗ್ಯಾರಂಟಿಗಳಿಗೆ ಹಲವಾರು ಶರತ್ತುಗಳನ್ನು ವಿಧಿಸಿ ಕೊಟ್ಟ ಮಾತು ತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಜಿಲ್ಲಾಧ್ಯಕ್ಷರು ನೀಡಿದ ಹೇಳಿಕೆಯನ್ನು ಕೆದಕಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕತೆ ಉಳಿದಿಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ತಿಳಿಸಿದ್ದಾರೆ.
ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಖಜಾನೆಯನ್ನು ಬರಿದಾಗಿಸಿ, ರಾಜ್ಯವನ್ನು ದಿವಾಳಿಯ ಅಂಚಿನತ್ತ ಕೊಂಡೊಯ್ಯುವ ಹಪಾಹಪಿಯಲ್ಲಿರುವ ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಕಾಂಗ್ರೆಸ್ ಮುಖಂಡರು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ತಲೆ ಬೋಳಿಸಿಕೊಳ್ಳುವ ಸಲಕರಣೆಗಳನ್ನು ಕಳುಹಿಸಿಕೊಡುತ್ತೇವೆ ಎಂದಿರುವುದು ತಮ್ಮ ಮುಖಕ್ಕೆ ತಾವೇ ಉಗಿದುಕೊಂಡಂತಿದೆ.
ಯಾವುದೇ ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿಗೊಳಿಸಲು ಅಸಮರ್ಥವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಯಾವುದೇ ಶಾಸಕರಿಗೂ ಅನುದಾನದ ಒಂದು ರೂಪಾಯಿ ಚಿಕ್ಕಾಸನ್ನೂ ಬಿಡುಗಡೆ ಮಾಡದ ಅಭಿವೃದ್ಧಿ ವಿರೋಧಿ ರಾಜ್ಯ ಸರಕಾರ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ಪಕ್ಷದ ಸ್ವoತ ನಿಧಿಯನ್ನು ಬಳಸುವ ಬದಲು ರಾಜ್ಯದ ಜನತೆಯ ತೆರಿಗೆ ಹಣವನ್ನು ಫೋಲು ಮಾಡುತ್ತಿರುವುದು ಖಂಡನೀಯ.
ಚುನಾವಣಾ ಪೂರ್ವದಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಕಾಂಗ್ರೆಸ್ ಮುಖಂಡರಿಗೆ ಒಂದು ಕಾಳು ಅಕ್ಕಿಯನ್ನು ನೀಡಲೂ ಸಾಧ್ಯವಾಗಿಲ್ಲ. 5 ಕೆಜಿ ಅಕ್ಕಿಯ ಬದಲು ಹಣವನ್ನು ನೀಡುತ್ತೇವೆ ಎಂದರೂ ಸಮರ್ಪಕವಾಗಿ ತಲುಪಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ಅಯೋಧ್ಯೆಯ ಶ್ರೀ ರಾಮ ಮಂದಿರದ ಮಂತ್ರಾಕ್ಷತೆಯನ್ನು ಹಂಚುತ್ತಿದ್ದಾರೆ ಎಂದು ಲೇವಡಿ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷದ ಅಧ:ಪತನದ ಮುನ್ಸೂಚನೆಯಾಗಿದೆ.
ಎಲ್ಲಾ ನಿರುದ್ಯೋಗಿ ಪದವೀಧರರಿಗೆ ಮಾಶಾಸನ ನೀಡುವ ವಾಗ್ದಾನ ಮಾಡಿದ್ದ ಕಾಂಗ್ರೆಸ್ ಅದರಲ್ಲೂ ನಿಯಮ ರೂಪಿಸಿದೆ. ಗೃಹಲಕ್ಷ್ಮಿ ಯೋಜನೆ ಹಳ್ಳ ಹಿಡಿದಿದೆ. ಉಚಿತ ಬಸ್ ಪ್ರಯಾಣ ದುಸ್ತರವಾಗಿದೆ. ಗೃಹ ಜ್ಯೋತಿಯ ಸಲುವಾಗಿ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬರೆಯ ಜೊತೆಗೆ ಅಸಮರ್ಪಕ ವಿದ್ಯುತ್ ಪೂರೈಕೆಯ ಶಾಕ್ ನೀಡಿರುವುದು ವಿಷಾದನೀಯ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಗ್ಯಾರಂಟಿಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತಮ.
ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿ ನೀಡುತ್ತೇನೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದ ರೈತರ ಸಾಲು ಸಾಲು ಆತ್ಮಹತ್ಯೆಗಳು ಕಾಣುತ್ತಿಲ್ಲ. ಬರ ಪರಿಹಾರಕ್ಕೆ ನೀಡಲು ಸರಕಾರದಲ್ಲಿ ಹಣ ಹಣಕಾಸಿನ ಬರ ಇದೆ. 500 ವರ್ಷಗಳ ಸುದೀರ್ಘ ಹೋರಾಟ, ತ್ಯಾಗ, ಬಲಿದಾನದ ಪರಿಣಾಮವಾಗಿ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರದ ಲೋಕಾರ್ಪಣೆಗೆ ಹೋಗಬಾರದೆಂದು ಕಾಂಗ್ರೆಸ್ ತೀರ್ಮಾನಿಸಿರುವುದು ಬಹುಸಂಖ್ಯಾತ ಹಿಂದೂಗಳಿಗೆ ಮಾಡಿದ ಘೋರ ಅಪಮಾನವಾಗಿದೆ. ರಾಜ್ಯದ ಲೂಟಿ, ಭ್ರಷ್ಟಾಚಾರ, ದುರಾಡಳಿತದಿಂದ ಬೇಸತ್ತ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ನೀಡಲಿರುವ ಜನಾದೇಶದ ಸಂದರ್ಭದಲ್ಲಿ ಕಾಂಗ್ರೆಸ್ಸಿಗರಿಗೆ ತಮ್ಮ ತಲೆಯನ್ನು ಬೋಳಿಸಿಕೊಳ್ಳಲು ಬ್ಲೇಡುಗಳು ಸಾಕಾಗಲಿಕ್ಕಿಲ್ಲ ಎಂದು ಕಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ‘ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್’ ಎಂಬಂತೆ ಉಡುಪಿ ನಗರಸಭೆಯಲ್ಲಿ ಪ್ರಸಕ್ತ ಆಡಳಿತಾಧಿಕಾರಿ ಮತ್ತು ಪೌರಾಯುಕ್ತರ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ ಮಿತಿ ಮೀರಿದ್ದು, ಈ ಬಗ್ಗೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನದಲ್ಲಿರುವ ಕಾಂಗ್ರೆಸ್ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭ್ರಷ್ಟಾಚಾರ ಕುರಿತಂತೆ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ.
ನಗರಸಭೆ ಸಂಬಂಧಿಸಿದ ಖಾತಾ ಬದಲಾವಣೆ, ಇ-ಖಾತಾ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ, ಅಧಿಕಾರಿಗಳ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಸಾಕ್ಷಿ ಸಮೇತ ಎಲ್ಲಾ ದಾಖಲೆಗಳ ಸಹಿತ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರವರ ಸವಾಲನ್ನು ಸ್ವೀಕರಿಸಿದಲ್ಲಿ ಉಡುಪಿ ನಗರದ ಜನತೆಗೆ ನ್ಯಾಯ ಒದಗಿಸಿದಂತಾಗುವುದು.
ನಗರಸಭೆಯ ದುರಾಡಳಿತದಿಂದ ರೋಸಿಹೋಗಿರುವ ಜನತೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದು, ಪ್ರಸಕ್ತ ಬಿಜೆಪಿ ನಗರಸಭಾ ಸದಸ್ಯರ ಸಂಖ್ಯಾಬಲ 32 ರಷ್ಟಿದ್ದರೂ ಕೇವಲ 3 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಹಿಂಬಾಗಿಲಿನಿಂದ ಆಡಳಿತ ವ್ಯವಸ್ಥೆಯಲ್ಲಿ ಕೈಯಾಡಿಸುತ್ತಿರುವುದು ವಿಪರ್ಯಾಸವಾಗಿದೆ.
ನಗರಸಭೆ ಆಡಳಿತಾಧಿಕಾರಿಗಳು ಮತ್ತು ಪೌರಾಯುಕ್ತರು ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವ ಜೊತೆಗೆ ಮೂಲಭೂತ ಆದ್ಯತೆಯಾಗಿರುವ ಕುಡಿಯುವ ನೀರಿನ ದರವನ್ನು ಮೂರು ಪಟ್ಟು ಹೆಚ್ಚಳ ಮಾಡುವ ಜನ ವಿರೋಧಿ ನಿರ್ಣಯ ಕೈಗೊಂಡಿರುವುದು ಖಂಡನೀಯ. ‘ಅಪಪ್ರಚಾರವೇ ಕಾಂಗ್ರೆಸ್ ಜೀವಾಳ’ ಎಂಬಂತೆ ಕಾಂಗ್ರೆಸ್ಸಿಗರು ಬಿಜೆಪಿ ವಿರುದ್ಧ ವಿವಿಧ ಸನ್ನಿವೇಶಗಳಲ್ಲಿ ಯಾವ ರೀತಿಯ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ.
ನಗರಸಭೆಯ ಆಡಳಿತದ ಪ್ರಥಮ ಅವಧಿ ಮುಗಿದು ಎಂಟು ತಿಂಗಳು ಕಳೆದರೂ ಎರಡನೇ ಅವಧಿಯ ಆಡಳಿತದ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರಕಾರ ದಿವ್ಯ ನಿರ್ಲಕ್ಷ್ಯ ತೋರಿದಂತೆ ಕಂಡುಬರುತ್ತಿದೆ. ಜಿಲ್ಲೆಗೆ ಅತಿಥಿಯಂತೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಷ್ಠಿತ ಉಡುಪಿ ನಗರಸಭೆಯ ಬ್ರಹ್ಮಾಂಡ ಭ್ರಷ್ಟಾಚಾರ, ದುರಾಡಳಿತ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ ಹಾಗೂ ಜನ ವಿರೋಧಿ ನೀತಿಗಳತ್ತ ತುರ್ತು ಗಮನ ಹರಿಸುವುದು ಸೂಕ್ತ. ಜನತೆ ನಗರಸಭೆಯ ಅವ್ಯವಸ್ಥೆಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು ಕಾಂಗ್ರೆಸ್ ಕೃಪಾಪೋಷಿತ ದುರಾಡಳಿತಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಹೇಶ್ ಠಾಕೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಈ ಕೆಳಗಿನ ದಿನಾಂಕದಂದು ವಿವಿಧ ಪಂಚಾಯತ್ ಗಳಿಗೆ ಆಗಮಿಸಲಿದೆ. ಎಲ್ಲ ಗ್ರಾಮಪಂಚಾಯತ್ ಅಧ್ಯಕ್ಷರು ಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ವಿಶೇಷ ಮುತುವರ್ಜಿ ವಹಿಸಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಬೇಕು. ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಭೆಗೆ ತಪ್ಪದೇ ಹಾಜರಾಗಬೇಕು ಅಲ್ಲದೆ ತಮ್ಮ ತಮ್ಮ ವಾರ್ಡ್ ಗಳಲ್ಲಿ ವ್ಯಾಪಕ ಪ್ರಚಾರ ನೀಡಿ ಯಾವುದೇ ಪಂಚಾಯತ್ ನಲ್ಲಿಯೂ 400-500 ಕ್ಕೆ ಕಡಿಮೆಯಾಗದಂತೆ ಸಭೆಗಳನ್ನು ಆಯೋಜಿಸಬೇಕು. ಎಲ್ಲ ಸಭೆಗಳಿಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಯವರು ಖುದ್ದಾಗಿ ಭಾಗವಹಿಸಲಿರುವರು.
ದಿನಾಂಕದೊಂದಿಗೆ ವಿವರಗಳು:
09-01-25 ಮಂಗಳವಾರ ಬೆಳಿಗ್ಗೆ 9.00 ಕ್ಕೆ ಹೆಜಮಾಡಿ 09-01-25 ಮಂಗಳವಾರ ಮಧ್ಯಾಹ್ನ 2.00 ಕ್ಕೆ ಪಲಿಮಾರು
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರ ಶ್ರದ್ಧಾಂಜಲಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಜನಾನುರಾಗಿ ಬಿ.ಸುಧಾಕರ ಶೆಟ್ಟಿಯವರ ತತ್ವಾದರ್ಶಗಳು ಮತ್ತು ಪಕ್ಷ ಸಂಘಟನೆಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ನುಡಿ ನಮನ ಸಲ್ಲಿಸಿದರು. ಅಗಲಿದ ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯ ಜೊತೆಗೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಎಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್, ಪೆರಣಂಕಿಲ ಶ್ರೀಶ ನಾಯಕ್, ಸವಿತಾ ಶಿವಾನಂದ ಕೋಟ್ಯಾನ್, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ನಗರ ಸಭೆ ಮಾಜಿ ಅಧ್ಯಕ್ಷೆ ಸುಮಿತ್ರ ಆರ್. ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶಾಮಲಾ ಎಸ್. ಕುಂದರ್ ಸಹಿತ ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಟ, ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ವಿಚಲಿತಗೊಂಡಿರುವ ಕಾಂಗ್ರೆಸ್ ನಾಯಕರ ಶ್ರೀ ರಾಮ ಮಂದಿರ ವಿರೋಧಿ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಹಿಂದುತ್ವದ ವಿರುದ್ಧ ಸದಾ ಕೆಂಡ ಕಾರುವ ಕಾಂಗ್ರೆಸ್ಸಿನ ವಿವಾದಿತ ನಾಯಕ ಬಿ.ಕೆ. ಹರಿಪ್ರಸಾದ್ ಮೂಲೆಗುಂಪಾಗುವ ಭಯದಿಂದ ಆಗಾಗ ತನ್ನ ಹರಕು ನಾಲಗೆಯ ಪ್ರದರ್ಶನವನ್ನು ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಆದರೆ ಈ ಬಾರಿ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ಉದ್ದೇಶಿಸಿ, ಕರ್ನಾಟಕದಲ್ಲೂ ಗೋದ್ರಾ ಮಾದರಿಯ ಗಲಭೆ ನಡೆಯುವ ಸಾಧ್ಯತೆ ಇದೆ ಎಂದಿರುವುದು ಸ್ವತಃ ರಾಜ್ಯ ಕಾಂಗ್ರೆಸ್ ಸರಕಾರವನ್ನು ಪೇಚಿಗೆ ಸಿಲುಕಿಸಿದೆ. ಈ ಹೇಳಿಕೆಯ ಹಿನ್ನೆಲೆಯಲ್ಲಿ ಬಿ.ಕೆ. ಹರಿಪ್ರಸಾದ್ ಅವರನ್ನು ಕೂಡಲೇ ಉನ್ನತ ತನಿಖೆಗೆ ಒಳಪಡಿಸಿ ವಿರೋಧಿಗಳ ಹುನ್ನಾರದ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವುದು ಸಿ.ಎಂ. ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರದ ಹೊಣೆಯಾಗಿದೆ. ಈ ಕುರಿತು ಕೇಂದ್ರ ಸರಕಾರವೂ ಮಧ್ಯಪ್ರವೇಶಿಸಿ ಎನ್ಐಎ ಮೂಲಕ ಹರಿಪ್ರಸಾದ್ ರವರ ತೀವ್ರ ವಿಚಾರಣೆ ನಡೆಸುವುದು ಅತ್ಯವಶ್ಯಕವಾಗಿದೆ.
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವುದನ್ನು ಸಹಿಸದೆ ಬಹಳಷ್ಟು ಹೋರಾಡಿ ವೈಫಲ್ಯದಿಂದ ಕಂಗೆಟ್ಟಿರುವ ಕಾಂಗ್ರೆಸ್ ಇಂದು ಹಿಂದೂ ಸಮಾಜದ ಶ್ರದ್ಧಾ ಕೇಂದ್ರ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಲೋಕಾರ್ಪಣೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಅಸಹನೆ ಮತ್ತು ದ್ವೇಷದಿಂದ ಉದ್ದೇಶಪೂರ್ವಕವಾಗಿ ರಾಮಭಕ್ತ ಕರಸೇವಕರನ್ನು ಬಂಧಿಸುವ ಮೂಲಕ ತೀವ್ರ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದು ಖಂಡನೀಯ.
ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿಯವರನ್ನು 32 ವರ್ಷಗಳ ಹಿಂದಿನ ಪ್ರಕರಣದ ನೆಪದಲ್ಲಿ ಬಂಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನೀತಿ ಹಾಗೂ ಒಂದೇ ಕೋಮಿನ ಓಲೈಕೆಯೇ ಕಾರಣ ಎಂಬುದು ಅವರ ಗೊಂದಲದ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಶ್ರೀಕಾಂತ್ ಪೂಜಾರಿಯವರ ಮೇಲೆ 16 ಪ್ರಕರಣಗಳು ಬಾಕಿ ಇವೆ ಎಂದು ಡಂಗುರ ಸಾರಿದ್ದ ಸಿ.ಎಂ. ಸಿದ್ದರಾಮಯ್ಯ, ವಾಸ್ತವಿಕವಾಗಿ ಪೋಲಿಸ್ ದಾಖಲೆಯ ಪ್ರಕಾರ ಕೇವಲ 1 ಪ್ರಕರಣ ಮಾತ್ರ ಬಾಕಿ ಇರುವುದನ್ನು ಅರಿತು ತೀವ್ರ ಮುಖಭಂಗಕ್ಕೊಳಗಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಸರಿಯಾದ ಮಾಹಿತಿಯನ್ನು ಪಡೆಯದೆ ತರಾತುರಿಯಲ್ಲಿ ಹಿಂದೂ ಕಾರ್ಯಕರ್ತರನ್ನು ಧಮನಿಸಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಸಿ.ಎಂ. ಸಿದ್ದರಾಮಯ್ಯನವರಿಂದ ಹಿಂದೂ ವಿರೋಧಿ ನೀತಿಯನ್ನು ಬಳುವಳಿ ಪಡೆದುಕೊಂಡಿರುವ ಯತೀಂದ್ರ ಸಿದ್ದರಾಮಯ್ಯ ಭಾರತ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನದಂತೆ ದಿವಾಳಿಯಾಗುತ್ತದೆ ಎಂದಿರುವುದು ಹಾಸ್ಯಾಸ್ಪದವಾಗಿದೆ. ಭಾರತ ಎಲ್ಲಾ ಜಾತಿ-ಧರ್ಮಗಳನ್ನು ಒಳಗೊಂಡಿರುವ ಸನಾತನ ಸಂಸ್ಕೃತಿಯ ಅನೇಕತೆಯಲ್ಲಿ ಏಕತೆಯನ್ನು ಹೊಂದಿರುವ ಬಲಿಷ್ಠ ಹಿಂದೂ ರಾಷ್ಟ್ರ ಎಂಬುದನ್ನು ಕೇವಲ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಲ್ಲಿರುವ ಯತೀಂದ್ರ ಸಿದ್ದರಾಮಯ್ಯ ಅವರು ಮನದಟ್ಟುಮಾಡಿಕೊಳ್ಳುವುದು ಉತ್ತಮ.
ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಬೊಬ್ಬಿರಿದ ಸಿ.ಎಂ. ಸಿದ್ದರಾಮಯ್ಯನವರು ಬರ ಪರಿಹಾರಕ್ಕೆ ಹಾಗೂ ರಾಜ್ಯದ ಅಭಿವೃದ್ಧಿಗೆ ಚಿಕ್ಕಾಸನ್ನೂ ಬಿಡುಗಡೆ ಮಾಡದಿರುವುದು ಶೋಚನೀಯ. ದೇಶದ್ರೋಹಿ ಪಿಎಫ್ಐ ಮತಾಂಧ ಸಂಘಟನೆಯ ಸದಸ್ಯರ ನೂರಾರು ಪ್ರಕರಣಗಳನ್ನು ಹಿಂಪಡೆದಿರುವ ಜೊತೆಗೆ ಕೆಜೆ ಹಳ್ಳಿ ಡಿಜೆ ಹಳ್ಳಿ ಗಲಭೆಯ ಆರೋಪಿಗಳ ಬಗ್ಗೆ ದಿವ್ಯ ಮೌನ ವಹಿಸಿರುವ ಸಿದ್ದರಾಮಯ್ಯ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಸಂದರ್ಭದಲ್ಲೇ ಕರಸೇವಕರನ್ನು ಬಂಧಿಸುವ ಕುತಂತ್ರಕ್ಕೆ ಮುಂದಾಗಿರುವುದು ಕಾಂಗ್ರೆಸ್ಸಿನ ಹಿಂದೂ ದ್ವೇಷಿ ಮನೋಭಾವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಹಿಂದೂ ಸಮಾಜ ಇಂತಹ ಗೊಡ್ಡು ಬೆದರಿಕೆಗಳಿಗೆ ಎಂದೂ ಮಣಿಯಲಾರದು. ದೇಶದೆಲ್ಲೆಡೆ ತಿರಸ್ಕೃತಗೊಂಡಿರುವ ಕಾಂಗ್ರೆಸ್ ಅಧಿಕಾರ ಶಾಶ್ವತ ಅಲ್ಲ ಎಂಬುದನ್ನು ಮರೆತಂತಿದೆ. ರಾಜ್ಯದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿನ ಹಿಂದೂ ಧಮನ ನೀತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಶಾಸ್ತಿಯನ್ನು ಮಾಡಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.