ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ

ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದಿದ್ದು ಇದರನ್ವಯ ಬಲವಂತದ ಮತಾಂತರವನ್ನು ಅಪರಾಧವೆಂದು ಪರಿಗಣಿಸುವ ಜೊತೆಗೆ 3 ರಿಂದ 10 ವರ್ಷಗಳ ಶಿಕ್ಷೆಗೆ ಅವಕಾಶ ಹಾಗೂ ಇನ್ನಿತರ ಹಲವಾರು ಪೂರಕ ನಿಯಮಗಳನ್ನು ರೂಪಿಸಿದೆ.

ಕಾಂಗ್ರೆಸ್ ಸರಕಾರ ಈ ಜನ ವಿರೋಧಿ ನಿರ್ಣಯದ ಮೂಲಕ ಲವ್ ಜಿಹಾದ್ ಪಿಡುಗು ಹಾಗೂ ಇತರ ಮಾರ್ಗಗಳ ಮೂಲಕ ನಡೆಯುತ್ತಿರುವ ಮೋಸದ ಮತಾಂತರಕ್ಕೆ ಪ್ರೋತ್ಸಾಹ ನೀಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬಹುದಾದ ಬಲವಂತದ ಮತಾಂತರ ಪ್ರಕರಣಗಳಿಗೆ ಕಾಂಗ್ರೆಸ್ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಪಠ್ಯ ಪುಸ್ತಕ ಪರಿಷ್ಕರಣೆ ನಿರ್ಣಯದ ಮೂಲಕ ವಿದ್ಯಾರ್ಥಿಗಳು ವೀರ ಸಾವರ್ಕರ್, ಹೆಡಗೇವಾರ್ ರವರಂತಹ ಮಹಾನ್ ಪುರುಷರ ಜೀವನ ಮೌಲ್ಯಗಳನ್ನು ಅರಿಯುವ ನಿಟ್ಟಿನಲ್ಲಿ ಅವಕಾಶ ವಂಚಿತರನ್ನಾಗಿಸಿದೆ. ಸರಕಾರದ ಈ ನಡೆ ಮತಾಂಧ ಶಕ್ತಿಗಳ ಅಜೆಂಡಾವನ್ನು ಜಾರಿಗೆ ತರುವ ಸೇಡಿನ ರಾಜಕಾರಣವಾಗಿದೆ.

ನಕಲಿ ಗ್ಯಾರಂಟಿಗಳ ಮೂಲಕ ಮೋಸದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಕೊಟ್ಟ ಮಾತನ್ನು ನೆರವೇರಿಸಲಾಗದೆ ಮುಖಭಂಗ ಎದುರಿಸುತ್ತಿದ್ದು, ಜನತೆಯ ಗಮನವನ್ನು ಬೇರೆಡೆಗೊಯ್ಯಲು ಜನ ವಿರೋಧಿ ನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಸರಕಾರದ ಮೋಸದ ತಂತ್ರವನ್ನರಿತು ಅಲ್ಲಲ್ಲಿ ಬೀದಿಗಿಳಿದು ರಾಜ್ಯ ಸರಕಾರದ ವಿರುದ್ಧ ಪ್ರತಿಭಟಿಸುತ್ತಿರುವ ಜನತೆ ವಚನಭ್ರಷ್ಟ ಕಾಂಗ್ರೆಸ್ಸಿನ ಜನ ವಿರೋಧಿ ನಡೆಗೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ ಕೊಡುಗೆ; ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ಸಿನಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಹಾಸ್ಯಾಸ್ಪದ: ಕುಯಿಲಾಡಿ


ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯದ ಬಿಪಿಎಲ್ ಕುಟುಂಬಕ್ಕೆ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಮಾಸಿಕ 35 ಕೆ.ಜಿ. ಅಕ್ಕಿಯನ್ನು ಪಡಿತರ ಮೂಲಕ ಉಚಿತವಾಗಿ ವಿತರಿಸುತ್ತಿದೆ. ಆದರೆ ಕಾಂಗ್ರೆಸ್ ಸಹಿತ ಸಿ.ಎಂ. ಸಿದ್ದರಾಮಯ್ಯ ಎಲ್ಲಿಯೂ ಈ ವಿಚಾರವನ್ನು ಪ್ರಚುರಪಡಿಸದೆ ಸತ್ಯವನ್ನು ಮರೆಮಾಚುವ ಕೀಳು ಮನಸ್ಥಿತಿಯ ಮೂಲಕ ಬಡವರ ಅನ್ನದ ವಿಚಾರದಲ್ಲೂ ಹೊಲಸು ರಾಜಕೀಯವನ್ನು ಪ್ರದರ್ಶಿಸಿದೆ. ಕೇವಲ ಅಧಿಕಾರಕ್ಕೇರುವ ಸ್ವಯಂ ಸ್ವಾರ್ಥ ಸಾಧನೆಗಾಗಿ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲಾಗದೆ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ ಇದೀಗ ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ವಿಫಲ ಯತ್ನಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಚುನಾವಣೆಗೂ ಮೊದಲೇ ಕೇಂದ್ರ ಸರಕಾರ ರಾಜ್ಯದಲ್ಲಿ ನೀಡುತ್ತಿರುವ 5 ಕೆ.ಜಿ. ಅಕ್ಕಿಯೊಂದಿಗೆ ಕಾಂಗ್ರೆಸ್ ಉಚಿತ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಸೇರಿಸಿ ಜನತೆಗೆ ವಾಗ್ದಾನ ನೀಡಿದಂತೆ ಒಟ್ಟು 15 ಕೆ.ಜಿ. ಅಕ್ಕಿಯನ್ನು ಪಡಿತರ ಮೂಲಕ ವಿತರಿಸಬೇಕಾಗಿದೆ. ಈ ವಿಚಾರದಲ್ಲೂ ಕಾಂಗ್ರೆಸ್ ರಾಜ್ಯದ ಜನತೆಗೆ ಮಂಕು ಬೂದಿ ಎರಚುತ್ತಿರುವುದು ಸ್ಪಷ್ಟವಾಗಿದೆ.

ಈ ಹಿಂದಿನ ಅವಧಿಯಲ್ಲೂ ಸಿ.ಎಂ. ಸಿದ್ದರಾಮಯ್ಯ ಕೇಂದ್ರ ಸರಕಾರ ಅನ್ನ ಯೋಜನೆಯ ಮೂಲಕ ಉಚಿತವಾಗಿ ವಿತರಿಸಿದ ಅಕ್ಕಿಯನ್ನು ತನ್ನದೇ ಅನ್ನಭಾಗ್ಯ ಯೋಜನೆ ಎಂಬಂತೆ ಬಿಂಬಿಸಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿರುವ ವಿಚಾರ ಜಗಜ್ಜಾಹೀರಾಗಿದೆ. ಕೊರೋನಾ ಸಂದರ್ಭದಲ್ಲಿ ಗರೀಬ್ ಕಲ್ಯಾಣ್ ಯೋಜನೆಯಡಿ ದೇಶದ 90 ಕೋಟಿಗೂ ಮಿಕ್ಕಿ ಬಡ ಜನತೆಗೆ ಅನ್ನ ಯೋಜನೆ ಮೂಲಕ ಉಚಿತ ಅಕ್ಕಿ ವಿತರಿಸಿ ಬಡವರ ಪರ ಕಾಳಜಿ ತೋರಿಸಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಂಬುದನ್ನು ಸಿದ್ದರಾಮಯ್ಯನವರು ನೆನಪಿಸಿಕೊಳ್ಳಬೇಕಾಗಿದೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ 200 ಯುನಿಟ್ ವಿದ್ಯುತ್ ‘ನಿನಗೂ ಫ್ರೀ ನನಗೂ ಫ್ರೀ’ ಎಂದು ಡಂಗುರ ಸಾರಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರವರು ಇದೀಗ ಉಲ್ಟಾ ಹೊಡೆದಿದ್ದಾರೆ. 200 ಯುನಿಟ್ ಬದಲಿಗೆ 1 ವರ್ಷದ ಸರಾಸರಿ ಬಳಕೆ ಎಂದು ಷರತ್ತು ಹಾಕಿರುವ ಕಾಂಗ್ರೆಸ್ ಸರಕಾರ ಭರ್ಜರಿಯಾಗಿ ವಿದ್ಯುತ್ ದರವನ್ನು ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡುವ ಜೊತೆಗೆ ಪಂಗನಾಮ ಹಾಕಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಎಲ್ಲ ಎಸ್ಕಾಂಗಳ ಬೇಡಿಕೆಯಂತೆ ವಿದ್ಯುತ್ ದರವನ್ನು ಪರಿಷ್ಕರಿಸಿ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮೇ 12ರಂದು ಪ್ರತಿ ಯುನಿಟ್ ಗೆ 70 ಪೈಸೆಯಂತೆ ಏಪ್ರಿಲ್ ನಿಂದ ಪೂರ್ವಾನ್ವಯ ವಾಗುವಂತೆ ಜಾರಿಗೊಳಿಸಿದೆ. ಈ ಹಿಂದೆ ಮೊದಲ 50 ಯೂನಿಟ್ ಬಳಕೆಗೆ ಪ್ರತೀ ಯುನಿಟ್ ಗೆ ರೂ.4.15ರ ದರ ನಿಗದಿಯಾಗಿದ್ದು, ಪ್ರಸಕ್ತ 100 ಯುನಿಟ್ ಮೀರಿದರೆ ಬಳಸಿದ ಅಷ್ಟೂ ಯುನಿಟ್ ಗೆ, ಪ್ರತಿ ಯೂನಿಟ್ ಗೆ ರೂ.7 ರಂತೆ ದಿಡೀರಾಗಿ ದರವನ್ನು ಏರಿಸಿರುವುದು ಕಾಂಗ್ರೆಸ್ ಸರಕಾರಕ್ಕೆ ಬಡ ಜನತೆಯ ಮೇಲೆ ಯಾವುದೇ ಕಾಳಜಿ ಇಲ್ಲ ಎಬುದನ್ನು ಸಾಬೀತುಪಡಿಸಿದೆ.

ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮಂಜೂರುಗೊಂಡು ಪ್ರಾರಂಭವಾಗದ ಕಾಮಗಾರಿಗಳ ಸಹಿತ ಅನೇಕ ನಿರ್ಣಯಗಳನ್ನು ತಡೆ ಹಿಡಿಯುವುದು ಪ್ರಸಕ್ತ ಕಾಂಗ್ರೆಸ್ ಸರಕಾರಕ್ಕೆ ಸಾಧ್ಯವಾಗುವುದಾದರೆ ಜನತೆಯ ಜ್ವಲಂತ ಸಮಸ್ಯೆಗೆ ಕಾರಣವಾಗಿರುವ ವಿದ್ಯುತ್ ದರ ಏರಿಕೆಯನ್ನು ತಡೆ ಹಿಡಿಯಲು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಯಾಕೆ ಸಾಧ್ಯವಿಲ್ಲ ಎಂಬುದನ್ನು ರಾಜ್ಯದ ಜನತೆ ಪ್ರಶ್ನಿಸುವಂತಾಗಿದೆ. ಕಾಂಗ್ರೆಸ್ಸಿನ ಮೋಸದ ತಂತ್ರದ ಜನ ವಿರೋಧಿ ನೀತಿಗಳಿಂದ ರಾಜ್ಯದ ಜನತೆ ರೋಸಿಹೋಗಿದ್ದು ಮುಂದಿನ ಚುನಾವಣೆಗಳಲ್ಲಿ ಮಾತು ತಪ್ಪಿದ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣಾ ಅವಲೋಕನದ ಜೊತೆಗೆ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸೋಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ



ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅಲ್ಪಸಂಖ್ಯಾತರ ದರ್ಪ ಹೆಚ್ಚುತ್ತಿದೆ. ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ಅಗತ್ಯವಾಗಿದೆ ಎಂದರು.

ಕೊರೋನ ಸವಾಲಿನ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು ಆರ್ಥಿಕ ಸಾಧನೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನದಲ್ಲಿದೆ. ವಿವಿಧ ಕ್ಷೇತ್ರಗಳ ಸಾಧನೆಗಳ ಜೊತೆಗೆ ಮುಂದಿನ ಎರಡು ಮೂರು ವರ್ಷಗಳಲ್ಲಿ 3ನೇ ಸ್ಥಾನವನ್ನು ತಲುಪುವ ಗುರಿಯೊಂದಿಗೆ ಭಾರತ ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಭಾರತ ಇಂದು ವಿಶ್ವದೆಲ್ಲೆಡೆ ವಿಶೇಷ ಗೌರವಕ್ಕೆ ಪಾತ್ರವಾಗುತ್ತಿದೆ.

ಜನಸಂಘದ ಕಾಲದಲ್ಲೇ ವಿಶೇಷ ಸಾಧನೆ ಮೂಲಕ ದೇಶದಲ್ಲಿ ಹೆಸರುವಾಸಿಯಾಗಿದ್ದ ಉಡುಪಿ ಜಿಲ್ಲೆ ಮಗದೊಮ್ಮೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 100% ಫಲಿತಾಂಶದೊಂದಿಗೆ ತಲೆ ಎತ್ತಿ ನಿಂತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ದೇಶಕ್ಕೆ ಸಮರ್ಥ ನೇತೃತ್ವ ನೀಡುವ ನಿಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ರವರು ಮಾತನಾಡಿ, ಬಿಜೆಪಿಗೆ ರಾಜ್ಯದಲ್ಲಿ ಅನಿರೀಕ್ಷಿತ ಫಲಿತಾಂಶ ದೊರೆತರೂ ಉಡುಪಿ ಜಿಲ್ಲೆ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಜಿಲ್ಲೆಯ ಹಿರಿಮೆ ಗರಿಮೆ ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 9 ವರ್ಷಗಳ ಆಡಳಿತದಲ್ಲಿ ಭಾರತ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಅಭಿವೃದ್ಧಿಯ ಜೊತೆಗೆ 7.2% ಜಿಡಿಪಿ ದಾಖಲಿಸುವ ಮೂಲಕ ಆರ್ಥಿಕಾಭಿವೃದ್ಧಿಯಲ್ಲಿ ವಿಶ್ವದಲ್ಲೇ ನಂಬರ್ 1 ಸ್ಥಾನದಲ್ಲಿದೆ. ನರೇಂದ್ರ ಮೋದಿಯವರು ಮಗದೊಮ್ಮೆ ದೇಶದ ಪ್ರಧಾನಿಯಾಗಬೇಕೆಂಬ ನಿರೀಕ್ಷೆ ದೇಶವಾಸಿಗಳಲ್ಲಿದೆ. ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, ಜೂ.23ರಂದು ಪ್ರಧಾನಿ ಮೋದಿಯವರು ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ಕೀ ವೋಟರ್ಸ್ ಗಳನ್ನು ಗುರುತಿಸಿ ಬೇಟಿ ಮಾಡುವ ಜೊತೆಗೆ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಸೋಶಿಯಲ್ ಮೀಡಿಯಾ ಟೀಮ್ ಹಾಗೂ ಹಿರಿಯ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಮೂಲಕ ಮುಂಬರಲಿರುವ ತಾ.ಪಂ., ಜಿ.ಪಂ., ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣವನ್ನು ಸದೃಢಗೊಳಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲೇ ಉಡುಪಿ ಜಿಲ್ಲೆ ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿದೆ. ಬಿಜೆಪಿ ಜಿಲ್ಲೆಯ ಐದೂ ಸ್ಥಾನಗಳಲ್ಲಿ ಭರ್ಜರಿ ವಿಜಯ ದಾಖಲಿಸಿದೆ. ಈಗಾಗಲೇ ಕಾರ್ಯಕರ್ತರ ಅಭಿನಂದನಾ ಸಭೆ ಹಾಗೂ ಅವಲೋಕನ ಸಭೆಗಳನ್ನು ನಡೆಸಲಾಗಿದೆ. ಪ್ರಸಕ್ತ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ಸಿನ ಜನ ವಿರೋಧಿ ಸವಾಲುಗಳನ್ನು ಮೆಟ್ಟಿ ನಿಂತು ಪಕ್ಷದ ಮುಂದಿನ ಕಾರ್ಯ ಯೋಜನೆಗಳ ಅನುಷ್ಠಾನದ ಜೊತೆಗೆ ಸಂಘಟಿತ ಪ್ರಯತ್ನದ ಮೂಲಕ ತಾ.ಪಂ., ಜಿ.ಪಂ. ಮತ್ತು ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ದರಾಗಬೇಕು ಎಂದರು.

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಅವಲೋಕನದ ಬಗ್ಗೆ ಜಿಲ್ಲಾ ಕಾರ್ಯ ತಂಡದ ಸದಸ್ಯರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕರ್ತರ ಭಾವನೆಗಳನ್ನು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಪ್ರಮುಖರ ಗಮನಕ್ಕೆ ತರಲಾಗುವುದು. ರಾಜ್ಯಕ್ಕೆ ಮಾದರಿಯಾಗಿರುವ ಉಡುಪಿ ಜಿಲ್ಲೆಯ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ವಿ.ಸುನೀಲ್ ಕುಮಾರ್ ಕಾರ್ಕಳ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಗುರುರಾಜ್ ಗಂಟಿಹೊಳಿ ಬೈಂದೂರು, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಉಪಸ್ಥಿತರಿದ್ದರು.

ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ



ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಇವರ ಮೇಲೆ ಅಪರಿಚಿತರಾದ ಮೂರು ಜನ ಬಂದು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ಖಂಡನೀಯವಾದುದು. ಈ ಕುರಿತಂತೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳ ಮೇಲೆ ದೂರು ದಾಖಲಾದ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕ್ರತ್ಯ ಎಸಗಿರುವುದು ಕಂಡು ಬಂದಿದ್ದು ಬಂಧಿತರು ಈ ಕ್ರತ್ಯಕ್ಲೆ ಸ್ಥಳೀಯ ಕಾಂಗ್ರೆಸ್ ಮುಖಂಡ ನಿತಿನ ಜೆ ಸಾಲಿಯಾನ್ ಎಂಬವರು ತಮಗೆ ಈ ಕ್ರತ್ಯ ಎಸಗಲು ಸುಪಾರಿ ಕೊಟ್ಟಿರುವುದಾಗಿ ಹೇಳಿಕೆ ನೀಡಿದ್ದು ಮೂರ್ನಾಲ್ಕು ದಿನಗಳಾದರೂ ನಿತಿನ್ ಸಾಲ್ಯನ್ ರವರನ್ನು ಇನ್ನೂ ಬಂಧಿಸಲಾಗಿಲ್ಲ.

ಇದೀಗ ರಕ್ಷಿತ್ ಕೋಟ್ಯನ್ ರವರಿಗೆ ಹಾಗೂ ಅವರ ಕುಟುಂಬಕ್ಕೆ ನಿತಿನ್ ಜೆ ಸಾಲಿಯಾನ್ ಇವರಿಂದ ಜೋವ ಬೆದರಿಕೆ ಇದ್ದು ನಟೋರಿಯಸ್ ಕ್ರಿಮಿನಲ್ ಗಳಿಗೆ ಸುಪಾರಿ ನೀಡಿದ ನಿತಿನ್ ಜೆ ಸಾಲಿಯನ್ ಇವರನ್ನು ಕೂಡಲೇ ಬಂಧಿಸಬೇಕಾಗಿ ಉಡುಪಿ ಜಿಲ್ಲಾ ಸೂಪರಿಂಡೆಂಟ್ ಆಫ್ ಪೋಲೀಸ್ ಇವರಿಗೆ ಕಾಪು ಮಂಡಲ ಬಿಜೆಪಿ ಹಾಗೂ ಉದ್ಯಾವರ ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರದಾ ಕುಯಿಲಾಡಿ ಸುರೇಶ್ ನಾಯಕ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ,ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಪ್ರಕೊಷ್ಠಗಳ ಸಂಯೋಜಕರಾದ ವಿಜಯ್ ಕುಮಾರ್, ಉದ್ಯಾವರ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ರವಿ ಕೋಟ್ಯನ್, ಕಾಪು ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಪ್ರಮುಖರಾದ ಸಂತೋಷ್ ಸುವರ್ಣ, ಜಿತೇಂದ್ರ ಶೆಟ್ಟಿ, ಪ್ರಕಾಶ್ ಕುಮಾರ್, ರಮಾನಂದ, ಪ್ರವೀಣ್ ಪೂಜಾರಿ, ಉದ್ಯಾವರ ಪಂಚಾಯತ್ ಅಧ್ಯಕ್ಷರಾದ ರಾಧಾಕ್ರಷ್ಣ ಶ್ರಿಯಾನ್, ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಮತ್ತಿತರರು ಉಪಸ್ಥಿತರಿದ್ದರು.

ಉದ್ಯಾವರದಲ್ಲಿ ಕಾಂಗ್ರೆಸ್ ಪ್ರೇರಿತ ಗೂಂಡಾಗಿರಿ: ಶ್ರೀಕಾಂತ್ ನಾಯಕ್ ಖಂಡನೆ



ಕಾಪು: ಉದ್ಯಾವರ ಗರಡಿ ರಸ್ತೆಯ ಸಮೀಪದ ನಮ್ಮ ಕಾರ್ಯಕರ್ತರಾಗಿರುವ ರಕ್ಷಿತ್ ಕೋಟ್ಯಾನ್ ರವರ ಮನೆಗೆ ನುಗ್ಗಿ ಧಾಂಧಲೆ ನಡೆಸಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತಂತೆ ಪೋಲೀಸರು ಮೂರು ಜನರನ್ನು ಬಂಧಿಸಿದ್ದು ಇದರ ಮಾಸ್ಟರ್ ಮೈಂಡ್ ಉದ್ಯಾವರದ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಬಗ್ಗೆ ಬಂಧಿತರು ಹೇಳಿಕೆ ಕೊಟ್ಟಿದ್ದು ಪೋಲೀಸರು ಈ ಕೂಡಲೇ ಅವರನ್ನು ಬಂಧಿಸಬೇಕು. ಇಂತಹ ಗೂಂಡಾಗಿರಿಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಬಹುದು ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಅವರ ಭ್ರಮೆ. ತಪ್ಪಿತಸ್ಥ ಯಾರೇ ಇರಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ತೀವ್ರವಾದ ಪ್ರತಿಭಟನೆ ನಡೆಸಬೇಕಾದೀತು ಎಂದು ಕಾಫು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಕೇಂದ್ರದಿಂದ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ : ಜಿಲ್ಲಾ ಬಿಜೆಪಿ


ಉಡುಪಿ: 2023-24ರ ಬೆಳೆ ವರ್ಷದಲ್ಲಿ ಬೆಳೆಯುವ ಮತ್ತು ಮುಂಗಾರು ಮಾರುಕಟ್ಟೆ ಅವಧಿಯಲ್ಲಿ ಖರೀದಿಸುವ ಎಲ್ಲ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.

ಕೃಷಿ ಪ್ರಧಾನ ದೇಶ ಭಾರತದಲ್ಲಿ ಬೆಳೆಗಳ ವೈವಿಧ್ಯತೆಗೆ ಉತ್ತೇಜನ ಮತ್ತು ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಗೆ ಪ್ರೋತ್ಸಾಹ ನೀಡುವ ಜೊತೆಗೆ ಗ್ರಾಮೀಣ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಹಾಗೂ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಕೃಷಿ ಬೆಳೆಗಳ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸುಗಳನ್ನು ಆಧರಿಸಿ ಕೇಂದ್ರ ಸರಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಹೆಚ್ಚಳ ಮಾಡಲು ತೀರ್ಮಾನಿಸಿದೆ. ದೇಶದ ಪ್ರಮುಖ ಆಹಾರ ಬೆಳೆಗಳಾದ ಭತ್ತ, ರಾಗಿ ಹಾಗೂ ದ್ವಿದಳ ಧಾನ್ಯಗಳಾದ ತೊಗರಿ, ಹೆಸರು ಕಾಳು, ಉದ್ದು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನಾ ಪ್ರಮಾಣ ವೃದ್ಧಿ ಮತ್ತು ದೇಶದ ಆರ್ಥಿಕತೆ ಶಕ್ತಿ ತುಂಬುವ ಜೊತೆಗೆ ರೈತರ ಸ್ವಾವಲಂಬಿ ಬದುಕಿಗೆ ಪುಷ್ಠಿ ನೀಡಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ; ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್



ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ಸಿಗೆ ಅಧಿಕಾರ ದೊರೆತ ಬಳಿಕ ಈ ಉಚಿತ ಗ್ಯಾರಂಟಿಗಳು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಗೆ ದಿನಕ್ಕೊಂದು ಷರತ್ತುಗಳನ್ನು ಹಾಕುತ್ತಾ ಜನತೆಯಲ್ಲಿ ಆತಂಕ ಮತ್ತು ಗೊಂದಲವನ್ನು ಸೃಷ್ಠಿಸಿದೆ. ಸರಕಾರದ ಮೇಲೆ ವಿಶ್ವಾಸ ಕಳೆದುಕೊಂಡಿರುವ ಜನತೆ ತಾಳ್ಮೆ ಕಳೆದುಕೊಂಡು ಬೀದಿಗಿಳಿಯುವ ದಿನ ದೂರವಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸಿಗರು ತಾವೇ ಸೃಷ್ಠಿಸಿರುವ 40% ಕಮಿಷನ್ ಪ್ರಹಸನ ಮತ್ತು 15 ಲಕ್ಷ ಖಾತೆಗೆ ಹಾಕುವ ಪ್ರಹಸನವನ್ನು ಗುರಾಣಿಯನ್ನಾಗಿಸಿ ಪದೇ ಪದೇ ಅದೇ ರಾಗ ಅದೇ ಹಾಡು ಎಂಬಂತೆ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ. ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಜನತೆಯ ಮುಂದೆ ನಗೆ ಪಾಟಲಿಗೀಡಾಗುವ ಬದಲು ಕಾಂಗ್ರೆಸ್ಸಿಗರು ತಮ್ಮದೇ ಸರಕಾರದಲ್ಲಿ ಈ ಬಗ್ಗೆ ಸೂಕ್ತ ತನಿಖೆಯನ್ನು ನಡೆಸುವ ಮೂಲಕ ಪ್ರಕರಣವನ್ನು ಸಾಬೀತುಪಡಿಸುವ ಜೊತೆಗೆ ಪ್ರಧಾನಿಯವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಕೂಡಾ ರುಜುವಾತುಪಡಿಸುವ ದೈರ್ಯ ತೋರುವುದು ಉತ್ತಮ ಎಂದು ಅವರು ಆಗ್ರಹಿಸಿದ್ದಾರೆ.

‘ಫಲಿತಾಂಶಕ್ಕಾಗಿ ಎಲ್ಲವನ್ನೂ ಮಾಡಬೇಕು; ಗ್ಯಾರಂಟಿಗಳು ಚೀಪ್ ಪಾಪ್ಯುಲಾರಿಟಿ’ ಎಂದು ಸ್ವತಃ ಕಾಂಗ್ರೆಸ್ ಸರಕಾರದ ಕೃಷಿ ಸಚಿವರು ಗ್ಯಾರಂಟಿಗಳ ಬಗ್ಗೆ ಅವಮಾನಕರ ಹೇಳಿಕೆಯನ್ನು ನೀಡಿರುವುದು ಕಾಂಗ್ರೆಸ್ ನಕಲಿ ಉಚಿತ ಗ್ಯಾರಂಟಿಗಳ ಮೂಲಕ ರಾಜ್ಯದ ಜನತೆಯನ್ನು ಯಾಮಾರಿಸಿದೆ ಎಂಬುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ‘ನನಗೂ ಫ್ರೀ ನಿನಗೂ ಫ್ರೀ’ ‘ಹತ್ತು ಕೆ.ಜಿ. ಅಕ್ಕಿ ಬೇಕಾ ಬೇಡ್ವಾ’ ಎಂದು ಕಾಂಗ್ರೆಸ್ ಮುಖಂಡರು ಪುಂಖಾನುಪುಂಖವಾಗಿ ಉಚಿತ ಗ್ಯಾರಂಟಿಗಳ ಬಗ್ಗೆ ಪುಂಗಿ ಊದಿರುವುದು ಕೇವಲ ಚುನಾವಣಾ ಗಿಮಿಕ್ ಎಂಬುದು ಇದೀಗ ಸಾಬೀತಾಗಿದೆ.

ಗೃಹ ಲಕ್ಷ್ಮಿ ಗ್ಯಾರಂಟಿಯಡಿ 200 ಯುನಿಟ್ ವಿದ್ಯುತ್ ಫ್ರೀ ಎಂದಿರುವ ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗೆ ಹಲವಾರು ಷರತ್ತುಗಳನ್ನು ಹಾಕಿರುವ ಜೊತೆಗೆ ದಿಢೀರ್ ವಿದ್ಯುತ್ ದರವನ್ನು ಏರಿಸಿ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ. ಗೃಹ ಲಕ್ಷ್ಮಿ ಗ್ಯಾರಂಟಿಯಡಿ ಮನೆಯೊಡತಿ ಯಾರು ಎಂಬ ವಿವಾದ ಸೃಷ್ಠಿಸಿದೆ. ಉಚಿತ 10 ಕೆ.ಜಿ. ಅಕ್ಕಿಯ ಗ್ಯಾರಂಟಿ ಅನುಷ್ಠಾನಕ್ಕೆ ಹೆಚ್ಚುವರಿ 5 ಕೆ.ಜಿ. ಅಕ್ಕಿಗಾಗಿ ಕೇಂದ್ರ ಸರಕಾರದ ಮೊರೆ ಹೋಗಿರುವ ಕಾಂಗ್ರೆಸ್ ಸರಕಾರ ಎಲ್ಲ ಪದವೀಧರ ನಿರುದ್ಯೋಗಿಗಳಿಗೆ ಮಾಸಾಶನ ನೀಡುವ ಮಾತನ್ನು ಮುರಿದು ಯುವ ಸಮುದಾಯಕ್ಕೆ ದ್ರೋಹ ಬಗೆದಿದೆ. ಇತ್ತ ಕಾಂಗ್ರೆಸ್ಸಿನ 5 ಉಚಿತ ಗ್ಯಾರಂಟಿಗಳೂ ಜಾರಿಯಾಗದೇ ಅತ್ತ ಅಭಿವೃದ್ಧಿ ಚಟುವಟಿಕೆಗಳೂ ನಡೆಯದೆ ರಾಜ್ಯ ದಿವಾಳಿತನದ ಅಂಚಿನತ್ತ ಸಾಗುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಚುನಾವಣಾ ಪೂರ್ವದಲ್ಲಿ ಉಚಿತ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್ ಮುಖಂಡರಲ್ಲಿ ಕಂಡು ಬಂದ ಉತ್ಸಾಹ, ಪೌರುಷ ಗ್ಯಾರಂಟಿ ಜಾರಿಯಲ್ಲಿ ಕಂಡು ಬಾರದೇ ಇರುವುದು ವಿಪರ್ಯಾಸ. ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಎಲ್ಲ 5 ಉಚಿತ ಖಚಿತ ಖಂಡಿತ ನಿಶ್ಚಿತಗಳ ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಅಬ್ಬರಿಸಿರುವ ಕಾಂಗ್ರೆಸ್ ಮುಖಂಡರು ಇದೀಗ ‘ಉಳ್ಳವರು ಫ್ರೀ ಗಳನ್ನು ತ್ಯಜಿಸಿ’ ಎಂದು ಗೋಗರೆಯುತ್ತಿರುವುದು ಕಾಂಗ್ರೆಸ್ ಸರಕಾರದ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಅಧಿಕಾರವಿಲ್ಲದೆ ಚಡಪಡಿಸುತ್ತಿದ್ದ ಕಾಂಗ್ರೆಸಿಗರು, ಇದೀಗ ರಾಜ್ಯ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ದಿನಕ್ಕೊಂದು ವಿವಾದಕರ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದು ನೋಡಿದರೆ ಮುಖ್ಯಮಂತ್ರಿಯವರಿಗೆ ಸಚಿವರ ಮೇಲೆ ಹಿಡಿತವಿದ್ದಂತೆ ಕಂಡುಬರುತ್ತಿಲ್ಲ. ಕಾಂಗ್ರೆಸ್ ಸರಕಾರದ ಎಲ್ಲ ಜನ ವಿರೋಧಿ ನೀತಿಗಳನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ. ಬಿಜೆಪಿಯ ಜನಪರ ಹೋರಾಟ ಮತ್ತು ಪ್ರತಿಭಟನೆಗಳನ್ನು ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ. ಬೆಲೆ ಏರಿಕೆ ಎಂದು ಬೊಬ್ಬಿರಿದು ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ಸಿಗೆ ಇದೀಗ ಅಗತ್ಯ ವಸ್ತುಗಳ ಬೆಲೆ ಇಳಿಸಲು ಸಕಾಲವಾಗಿದೆ. ರಾಜ್ಯದ ಜನತೆ ಎಲ್ಲ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಕಾಂಗ್ರೆಸಿಗರು ತಮ್ಮ ಸ್ವಾರ್ಥಕ್ಕಾಗಿ ತಾವೇ ಘೋಷಿಸಿಕೊಂಡಿರುವ ಉಚಿತಗಳ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ಇದ್ದಲ್ಲಿ ಮುಂಬರಲಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ಸಿನ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಬೆದರುವುದಿಲ್ಲ; ಎಲ್ಲಾ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಿ: ಕುಯಿಲಾಡಿಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ


ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಕಾಂಗ್ರೆಸ್ಸಿನ ಜನವಿರೋಧಿ ನೀತಿಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ಕೊಟ್ಟ ಮಾತು ತಪ್ಪಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮಾನಸಿಕತೆ 15 ದಿನಗಳಲ್ಲೇ ಸಾಬೀತಾಗಿದೆ. ಗೃಹ ಲಕ್ಷ್ಮಿ, 10 ಕೆ.ಜಿ. ಅಕ್ಕಿ, ಪದವೀಧರರ ಮಾಸಾಶನ, ಬಸ್ ಪ್ರಯಾಣ ಗ್ಯಾರಂಟಿಯಲ್ಲೂ ಕಾಂಗ್ರೆಸ್ ಸರಕಾರ ಸ್ಪಷ್ಟತೆ ಇಲ್ಲದೆ ತಾರತಮ್ಯ ನೀತಿ ಅನುಸರಿಸಿ ಜನತೆಯಲ್ಲಿ ಗೊಂದಲ ಸೃಷ್ಟಿಸಿ ಮೋಸ ಎಸಗಿದೆ ಎಂದರು.

ಸಚಿವ ಎಂ.ಬಿ. ಪಾಟೀಲ್ ಬಿಜೆಪಿ ಕಾರ್ಯಕರ್ತರು ಬಾಲ ಬಿಚ್ಚಿದರೆ ಜೈಲಿಗೆ ಹಾಕುವುದಾಗಿ ದುರಹಂಕಾರದ ಮಾತನ್ನಾಡಿರುವುದು ಖಂಡನೀಯ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಹೆದರಲ್ಲ. ಸರಕಾರದ ಜನವಿರೋಧಿ ನೀತಿಯನ್ನು ಬಿಜೆಪಿ ಎಂದಿಗೂ ವಿರೋಧಿಸುತ್ತದೆ. ದನ ಮತ್ತು ಕೋಣದ ವ್ಯತ್ಯಾಸ ತಿಳಿಯದವರನ್ನು ಪಶು ಸಂಗೋಪನಾ ಸಚಿವರನ್ನಾಗಿ ನೇಮಕ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದರು.

ಕೇವಲ ಚುನಾವಣೆಯನ್ನು ಗೆಲ್ಲುವ ಒಂದೇ ಉದ್ದೇಶದಿಂದ ಉಚಿತ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಜನತೆಗೆ ನೀಡಿರುವ ವಾಗ್ದಾನವನ್ನು ಯಥಾವತ್ತಾಗಿ ಈಡೇರಿಸುವಲ್ಲಿ ವಿಫಲವಾಗುತ್ತಿರುವುದು ಸ್ಪಷ್ಟವಾಗುತ್ತಿದೆ. ರಾಜ್ಯದ ಜನತೆ ಕಾಂಗ್ರೆಸ್ಸಿನ ಬಣ್ಣ ಬದಲಿಸುವ ಗೋಸುಂಬೆತನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಯಲ್ಲಿ ಜನತೆಗೆ ಎಸಗಿದ ಮೋಸ ಮತ್ತು ಕಾಂಗ್ರೆಸ್ಸಿನ ಜನ ವಿರೋಧಿ ನೀತಿಯನ್ನು ಖಂಡಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಮೋರ್ಚಾಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ವಿಜಯ ಕುಮಾರ್ ಉದ್ಯಾವರ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಪ್ರಮುಖರಾದ ರಾಜೇಂದ್ರ ಪಂದುಬೆಟ್ಟು, ಅಕ್ಷಯ್ ಶೆಟ್ಟಿ, ಸದಾನಂದ ಪ್ರಭು, ದಿನಕರ ಪೂಜಾರಿ, ಆನಂದ ಸುವರ್ಣ, ರುಡಾಲ್ಫ್, ಮಾಯಾ ಕಾಮತ್, ಪೂರ್ಣಿಮಾ ರತ್ನಾಕರ್, ಅಶ್ವಿನಿ ಶೆಟ್ಟಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ


ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ, ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು 70 ಪೈಸೆ ಯಷ್ಟು ವಿದ್ಯತ್ ದರ ಏರಿಸಿ ಜನವಿರೋಧಿ ನೀತಿ ತೋರಿಸಿದ್ದಾರೆ. ಇನ್ನು ಪಶುಸಂಗೋಪನಾ ಇಲಾಖೆಯ ಸಚಿವರಾದ ವೆಂಕಟೇಶ್ ರವರು ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಹಿಂದೂಗಳ ಭಾವನೆಗಳ ಮೇಲೆ ಚೆಲ್ಲಾಟವಾಡುವ ಮಾತನ್ನಾಡಿದ್ದಾರೆ. ಗೋವುಗಳೆಂದರೆ ಭಾರತೀಯರಿಗೆ ಪರಮ‌ ಪವಿತ್ರವಾದದು. ಯಾವುದೇ ಕೆಲಸ ಶುಭಾರಂಭ ಮಾಡುವುದಾದರೆ ಮೊದಲು ಗೋಪೂಜೆ ಮಾಡುವರು. ಗ್ರಹಪ್ರವೇಶ ಮಾಡುವುದಾರೂ ಮೊದಲು ಗೋವನ್ನು ಪ್ರವೇಶ ಮಾಡಿಸಿ ನಂತರ ನಾವು ಪ್ರವೇಶ ಮಾಡುವೆವು. ಭಾರತೀಯರದ್ದ ಗೋವು ಆಧಾರಿತ ಕ್ರಷಿ ಜೀವನ ಪಧ್ಧತಿ ಇದ್ದುದು. ಅಂತಹ ಗೋವುಗಳನ್ನು ಕಡಿಯುವ ಮಾತನ್ನಾಡುವ ಮೂಲಕ ನಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವರು. ಈ ಕಾಯ್ದೆ ಹಿಂಪಡೆಯುವ ಪ್ರಯತ್ನ ಮಾಡಿದಲ್ಲಿ ಬಿಜೆಪಿ ಕಾರ್ಯಕರ್ತರು ನಿಮ್ಮ ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಕಪ್ಟು ಬಾವುಟ ತೋರಿಸಿ ಪ್ರತಿಭಟನೆ ಮಾಡುವೆವು. ಗ್ರಾಮ ಗ್ರಾಮಗಳಲ್ಲಿ ಜನಜಾಗ್ರತಿ ಮೂಡಿಸುವೆವು ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರದಾ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿ, ವ್ರಧ್ಧ ಗೋವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆಗೆ ನಿಮ್ಮ ವ್ರಧ್ಧ ತಂದೆ ತಾಯಿ ಇದ್ದರೆ ಏನು ಮಾಡುವಿರೋ ಗೋವನ್ನೂ ಅದೇ ರೀತಿಯಲ್ಲಿ ನೋಡುವ ಸಂಸ್ಕ್ರತಿ ನಮ್ಮದು ಎಂದರು. ಚಕ್ರವರ್ತಿ ಸೂಲಿಬೆಲೆಗೆ ಜೈಲು ಸೇರಬೇಕಾದೀತು ಎನ್ನುವ ಸಚಿವ ಎಮ್ ಬಿ‌ ಪಾಟೀಲ್ ಹೇಳಿಕೆ ಖಂಡಿಸಲಾಗಿ ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ದಿನಂಪ್ರತಿ ಹೋರಾಟಕ್ಕೂ ನಾವು ಸಿಧ್ಧ ಎನ್ನುವ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು‌ ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಚಂದ್ರಶೇಖರ್ ಕೋಟ್ಯನ್, ಸುಧಾಮ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕ್ರಷ್ಣ ರಾವ್, ಮಂಡಲ ಕಾರ್ಯದರ್ಶಿಗಳಾದ ಲತಾ ಆಚಾರ್ಯ, ಚಂದ್ರ ಮಲ್ಲಾರ್, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಎಸ್ ಸಿ ಮೋರ್ಚ ಅಧ್ಯಕ್ಷರಾದ ಎಮ್ ಜಿ ನಾಗೇಂದ್ರ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶೈಲೇಶ್, ಪ್ರಮುಖರಾದ ಶರಣ್ ಕುಮಾರ್ ಮಟ್ಟು, ಪ್ರವೀಣ್ ಶೆಟ್ಟಿ ಇನ್ನಂಜೆ, ದಿನೇಶ್ ಕೋಟ್ಯನ್, ಜಗದೀಶ್ ಮೆಂಡನ್, ಶೈಲೇಶ್ ಶೆಟ್ಟಿ, ರಮಾ ಶೆಟ್ಟಿ, ಗೌರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಭೇಟಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ದಿನಾಂಕ 05-06-2023 ರಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Design a site like this with WordPress.com
Get started