ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿದ್ದ ಸುಧೀರ್ಘ ಚಳುವಳಿ ಅಂತ್ಯ


ನವದೆಹಲಿ:ಕೇಂದ್ರ ಗೃಹ ಸಚಿವಾಲಯದ ಜೊತೆ ತೀವ್ರ ಮಾತುಕತೆಗಳ ನಂತರ, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ವರ್ಷದಿಂದ ನಡೆಸುತ್ತಿದ್ದ ಸುಧೀರ್ಘ ಚಳವಳಿಯನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ.

ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಂಗೀಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ.ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ (SKM) ನಿನ್ನೆ ಸಂಜೆ ತಮ್ಮ 14 ತಿಂಗಳ ಪ್ರತಿಭಟನೆಯನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಿಂತೆಗೆದುಕೊಳ್ಳಲಾಗುವುದು ಎಂದು ತಿಳಿಸಿತ್ತು. ಆದರೆ ಸರ್ಕಾರದ ಪರಿಷ್ಕೃತ ಅಂತಿಮ ಪ್ರತಿಯನ್ನು ಸ್ವೀಕರಿಸಿದ ನಂತರವೇ ಅವರ ಬೇಡಿಕೆಗಳನ್ನು ಸ್ವೀಕರಿಸುವ ಪ್ರಸ್ತಾವನೆ ಮಾಡಿದ್ದರು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳು ಇಂತಿವೆ.

1. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಥವಾ ಕೇಂದ್ರ ಸರ್ಕಾರಿ ಏಜೆನ್ಸಿಗಳ ಅಡಿಯಲ್ಲಿ ಈ ಪ್ರತಿಭಟನೆಯ ಸಮಯದಲ್ಲಿ ದಾಖಲಾದ ಎಲ್ಲಾ ಪ್ರತಿಭಟನೆ-ಸಂಬಂಧಿತ ಪ್ರಕರಣಗಳನ್ನು ಹಿಂಪಡೆಯುವುದು ಇತ್ಯಾದಿ.


2. ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ ಧರಣಿ ನಿರತ ರೈತರ ಎಲ್ಲಾ ಕುಟುಂಬಗಳಿಗೆ ಪರಿಹಾರ.

3. ಹುಲ್ಲು ಸುಡುವ ಪ್ರಕರಣಗಳಲ್ಲಿ ರೈತರಿಗೆ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಬಾರದು

4. ಸರ್ಕಾರವು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು SKM ಅಥವಾ ಇತರ ರೈತ ಸಂಘಗಳೊಂದಿಗೆ ಚರ್ಚಿಸಬೇಕು.

5. ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಚರ್ಚಿಸಲು ಸಮಿತಿಯನ್ನು ರಚಿಸುವುದು; SKM ಸಮಿತಿಯಲ್ಲಿ ತಮ್ಮ ಸದಸ್ಯರನ್ನು ಪಟ್ಟಿ ಮಾಡುತ್ತದೆ ಮತ್ತು ಅದನ್ನು ರೈತರಿಗೆ ನೀಡುತ್ತದೆ.

6. ದೇಶದಲ್ಲಿ ಎಂಎಸ್‌ಪಿ ಮತ್ತು ಅದರ ಸಂಗ್ರಹಣೆಯಲ್ಲಿ ನಡೆಯುತ್ತಿರುವ ನೀತಿಯು ಹಾಗೆಯೇ ಮುಂದುವರಿಯುತ್ತದೆ.

ಕೃಷಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ನಂತರ ರೈತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲು ಒಮ್ಮತಕ್ಕೆ ಬರಲಾಯಿತು. ಪ್ರತಿಭಟನಾನಿರತ ರೈತರ ಪ್ರಕಾರ, ಸರ್ಕಾರವು ಎಸ್‌ಕೆಎಂ ಅಥವಾ ಸಂಬಂಧಿತ ರೈತ ಸಂಘಗಳೊಂದಿಗೆ ಸಮಾಲೋಚಿಸಿದ ನಂತರವೇ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿದೆ.

ಇದಲ್ಲದೆ, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯ ಸರ್ಕಾರಗಳು, ಪಂಜಾಬ್ ಮಾದರಿಯಲ್ಲಿ, ₹ 5 ಲಕ್ಷ ಪರಿಹಾರ ಮತ್ತು ಮೃತ ರೈತರ ಕುಟುಂಬಕ್ಕೆ ಉದ್ಯೋಗ ನೀಡಲು ಒಪ್ಪಿಕೊಂಡಿವೆ. ಅಂತಿಮವಾಗಿ, ರಾಜ್ಯಗಳು, ಕೇಂದ್ರದ ಅಧಿಕಾರಿಗಳು ಮತ್ತು ಕೃಷಿ ತಜ್ಞರನ್ನು ಹೊರತುಪಡಿಸಿ ಎಂಎಸ್‌ಪಿ ಸಮಿತಿಯಲ್ಲಿ ಎಸ್‌ಕೆಎಂ ನಾಯಕರನ್ನು ಮಾತ್ರ ಸೇರಿಸಬೇಕೆಂಬ ಬೇಡಿಕೆಯೂ ಈಡೇರಿದೆ.

ಭೀಕರ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್: CDS ಬಿಪಿನ್ ರಾವತ್ ಮತ್ತು ಪತ್ನಿ ಹಾಗೂ 11 ಮಂದಿ ಸಾವು


ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ 80 ರಷ್ಟು ಸುಟ್ಟ ಗಾಯಗಳಾಗಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಕೂನೂರಿನಲ್ಲಿರುವ ವೆಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಡಿಎಸ್ ಜ. ಬಿಪಿನ್ ರಾವತ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸೇನಾಪಡೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರು:

ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್. ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರಾಜಿಂದರ್ ಸಿಂಗ್, ಗುರು ಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜ, ಸತ್ಪಾಲ್, ಪೈಲೆಟ್ ಪೃಥ್ವಿ ಸಿಂಗ್ ಚೌಹಾಣ್ ಅವರು ಕೊನೆಯುಸಿರೆಳೆದಿದ್ದಾರೆ.


ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್ ದಂಪತಿ ಸೇರಿದಂತೆ ನಾಲ್ವರು ಅಧಿಕಾರಿಗಳು ಹಾಗೂ 14 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

ಸೇನಾ ಹೆಲಿಕಾಫ್ಟರ್ ದುರಂತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಶಂಕಿಸಲಾಗಿದ್ದು, ಬಿಪಿನ್ ರಾವತ್ ಸೇರಿದಂತೆ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದು, ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಜಾಗದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಗುರುಸೇವಕ್, ವಿವೇಕ್ ಕುಮಾರ್ ಮೃತಪಟ್ಟ ಇಬ್ಬರನ್ನು ಗುರುತಿಸಲಾಗಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ


ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಕಳೆದ 13 ವರ್ಷಗಳಿಂದ ಮೇಲ್ಮನೆ ಶಾಸಕರಾಗಿ, ಸಚಿವರಾಗಿ ಪರಿಣಾಮಕಾರಿ ಹೆಜ್ಜೆಗಳ ಮೂಲಕ ಅಧಿಕಾರ ವಿಕೇಂದ್ರೀಕರಣ ಹಾಗೂ ಪಂಚಾಯತ್ ರಾಜ್ ಮತ್ತು ನಗರಾಡಳಿತ ವ್ಯವಸ್ಥೆಯ ಬಲವರ್ಧನೆಯ ಜೊತೆಗೆ ಸದಸ್ಯರ ಗೌರವಧನ ಹೆಚ್ಚಿಸುವಲ್ಲಿ ಶ್ರಮ ವಹಿಸಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. ಡಿ.10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ದ.ಕ. ಮತ್ತು ಉಡುಪಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಏಕೈಕ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅವರ ಹೆಸರಿನ ಮುಂದೆ ಇರುವ ಸ್ಥಳದಲ್ಲಿ ಸ್ಪಷ್ಟವಾಗಿ I ಎಂದು ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರಲ್ಲಿ ವಿನಂತಿಸಿದ್ದಾರೆ.

ಸಾಮಾನ್ಯ ಕುಟುಂಬದಿಂದ ಬಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿ, ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ, ಮೂರು ಬಾರಿ ಸಚಿವರಾಗಿ ಸಾರ್ಥಕ ಜನಸೇವೆಗೈದಿದ್ದಾರೆ.

ಕೋಟರವರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಮಾಸಿಕ ರೂ.20ರಷ್ಟಿದ್ದ ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನವನ್ನು ಹಂತ ಹಂತವಾಗಿ ರೂ.250, ರೂ.500 ಹಾಗೂ ರೂ.1,000ಕ್ಕೆ ಹೆಚ್ಚಿಸುವಲ್ಲಿ ಸರಕಾರದ ಜೊತೆ ನಿರಂತರ ಶ್ರಮ ವಹಿಸಿರುವ ಕೋಟ ಶ್ರೀನಿವಾಸ ಪೂಜಾರಿಯವರು ಮುಂದಿನ ದಿನಗಳಲ್ಲಿ ಗೌರವ ಧನವನ್ನು ರೂ.2,000ಕ್ಕೆ ಏರಿಸುವಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಅತ್ಯಂತ ವ್ಯವಸ್ಥಿತವಾಗಿ ಪೂರ್ವಸಿದ್ಧತೆಗಳು ನಡೆದಿವೆ. ಈಗಾಗಲೇ ಜಿಲ್ಲಾ, ಮಂಡಲ ಮತ್ತು ಮಹಾ ಶಕ್ತಿಕೇಂದ್ರಗಳ ಮಟ್ಟದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಪದಾಧಿಕಾರಿಗಳ ಸಭೆಗಳನ್ನು ಚುನಾವಣಾ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನಿಲ್ ವಿ. ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಮ್. ಸುಕುಮಾರ ಶೆಟ್ಟಿ ಮತ್ತು ಪಕ್ಷದ ಮುಖಂಡರ ನೇತೃತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಆಯೋಜಿಸಲಾಗಿದೆ. ಗ್ರಾಮ ಪಂಚಾಯತ್ ವಾರು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಶಹ ಬಿಜೆಪಿ ಬೆಂಬಲಿತ ಸದಸ್ಯರಿಗೆ ಮತದಾನದ ಪ್ರಾತ್ಯಕ್ಷಿಕೆಯನ್ನು ನಡೆಸಲಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಶೇಕಡಾ ನೂರರಷ್ಟು ಮತದಾನದ ಗುರಿಯನ್ನು ಹೊಂದಲಾಗಿದ್ದು, ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗರಿಷ್ಠ ಬಹುಮತದಿಂದ ಚುನಾಯಿತರಾಗಿ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ: ದ.ಕ. ಜಿಲ್ಲಾ ಬಿಜೆಪಿಯ ಭೀಷ್ಮರೆನಿಸಿಕೊಂಡಿದ್ದ ಜನಸಂಘದ ಹಿರಿಯ ನಾಯಕ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ವೃತ್ತಿಯಲ್ಲಿ ವಕೀಲರಾಗಿ, ಪ್ರವೃತ್ತಿಯಲ್ಲಿ ಮೌಲ್ಯಾಧಾರಿತ ರಾಜಕಾರಿಣಿಯಾಗಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿ, ಪ್ರೇರಣಾ ಶಕ್ತಿಯಾಗಿ ಪಕ್ಷ ಸಂಘಟನೆಯಲ್ಲಿ ಕೆ.ರಾಮ ಭಟ್ ರವರ ಪಾತ್ರ ಅತ್ಯಂತ ಹಿರಿದು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಬಿಜೆಪಿ ಸರಣಿ ಸಭೆಗಳು


ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ | ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ, ಕೋಟರವರ ದೊಡ್ಡ ಅಂತರದ ಗೆಲುವಿಗೆ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕಾರಣರಾಗುವ ಜೊತೆಗೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಕೈಜೋಡಿಸಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ ಮಾಡಿದರು.

ಅವರು ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಹಾಲಾಡಿ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಹಾಲಾಡಿ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಚುನಾವಣೆಯಲ್ಲಿ ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, ಪ್ರಥಮ ಪ್ರಾಶಸ್ತ್ಯದ ಒಂದೇ ಮತ ಚಲಾಯಿಸುವ ಅವಕಾಶವಿದೆ. ಗ್ರಾಮ ಪಂಚಾಯತ್ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣಕ್ಕೆ ಕಳೆದ 13 ವರ್ಷಗಳಿಂದ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ. 1992ರಲ್ಲಿ ರೂ.20 ರಷ್ಟಿದ್ದ ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನವನ್ನು ಕ್ರಮವಾಗಿ 250, 500 ಹಾಗೂ 1,000ಕ್ಕೆ ಏರಿಸಲು ಸರಕಾರದೊಂದಿಗೆ ನಿರಂತರ ಪ್ರಯತ್ನವನ್ನು ಮಾಡಿದ್ದೇನೆ. ಮಾತ್ರವಲ್ಲದೆ ಪ್ರಸಕ್ತ ಗೌರವ ಧನವನ್ನು ರೂ.2,000ಕ್ಕೆ ಹೆಚ್ಚಿಸುವ ಬಗ್ಗೆಯೂ ಸ್ವಪ್ರಯತ್ನದಿಂದ ಸರಕಾರದ ಮೂಲಕ ಪೂರ್ವಸಿದ್ಧತೆಯನ್ನು ನಡೆಸಲಾಗಿದೆ. ಡಿ.10ರಂದು ನಡೆಯುವ ಚುನಾವಣೆಯಲ್ಲಿ ಅತ್ಯಂತ ಜಾಗರೂಕತೆಯಿಂದ ನನ್ನ ಹೆಸರಿನ ಮುಂದೆ ಪ್ರಥಮ ಪ್ರಾಶಸ್ತ್ಯದ ಮತವನ್ನು 1 ಅಂಕೆಯನ್ನು ಮಾತ್ರ ಬರೆಯುವ ಮೂಲಕ ನನಗೆ ನೀಡಿ, ಹೆಚ್ಚಿನ ಅಂತರದ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಚಲಾಯಿಸಲಿರುವ ಮತಗಳ ಅಂಕಿ ಅಂಶಗಳ ಪ್ರಕಾರ ಕೋಟ ರವರ ಗೆಲುವು ನಿಶ್ಚಿತ. ಆದರೆ ಒಂದೇ ಒಂದು ಮತವೂ ಅಸಿಂಧು ಆಗದಂತೆ ಜಾಗರೂಕತೆಯಿಂದ ಮತ ಚಲಾಯಿಸುವ ಅವಶ್ಯಕತೆಯಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಬಿಜೆಪಿ ಬೆಂಬಲಿತ ಸದಸ್ಯರಿಗೆ ಮತದಾನದ ಪ್ರಾತ್ಯಕ್ಷಿಕೆಯನ್ನು ನಡೆಸಲಾಗುವುದು. ಡಿ.10ರಂದು ಮತದಾರರಾದ ಗ್ರಾಮ ಪಂಚಾಯತ್ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಶಹ ಒಂದಾಗಿ ಒಟ್ಟಾಗಿ ಸೇರಿ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ ಇರುವ ನಿಗದಿತ ಸ್ಥಳದಲ್ಲಿ 1 ಆಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿ, ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಅಭ್ಯುದಯಕ್ಕಾಗಿ ನಿರಂತರ ಶ್ರಮಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಂತ ಹೆಚ್ಚಿನ ಅಂತರದ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಮತದಾನದ ಪ್ರಕ್ರಿಯೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿ, ಡಿ.10ರಂದು ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳೀಯಾಡಳಿತ ಸಂಸ್ಥೆಗಳ ಬಿಜೆಪಿ ಬೆಂಬಲಿತ ಸದಸ್ಯರು ಬೆಳಿಗ್ಗೆ 8.00 ರಿಂದ 11.00 ಗಂಟೆಯೊಳಗೆ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಅತ್ಯಂತ ಜಾಗರೂಕತೆಯಿಂದ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಬಿಜೆಪಿಯ ಸಮರ್ಥ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನೀಡಿ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಕುಂದಾಪುರ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರ್, ಬಿಜೆಪಿ ಹಾಲಾಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಶಂಕರ ಮೊಗವೀರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು, ಪಕ್ಷದ ಪ್ರಮುಖರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

*ಎಲ್ಲಾ ಮಹಾ ಶಕ್ತಿಕೇಂದ್ರಗಳ ವ್ಯಾಪ್ತಿಯಲ್ಲಿ ಸರಣಿ ಸಭೆಗಳು:*

ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕುಂದಾಪುರ ಮಂಡಲದ ವಿವಿಧ ಮಹಾ ಶಕ್ತಿ ಕೇಂದ್ರಗಳ ವ್ಯಾಪ್ತಿಯಲ್ಲಿ ನಡೆದ ಪೂರ್ವಭಾವಿ ಸಭೆಗಳಲ್ಲಿ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ಮಂದರ್ತಿಯ ವಿಖ್ಯಾತ್ ಶೆಟ್ಟಿ, ಸಾಲಿಗ್ರಾಮದ ಜಯೇಂದ್ರ ಪೂಜಾರಿ, ಕೋಟದ ಸುರೇಶ್ ಕುಂದರ್, ಕುಂದಾಪುರದ ರಾಜೇಶ್ ಕಡ್ಗಿಮನೆ, ಕೋಟೇಶ್ವರದ ಕೃಷ್ಣ ಗೊಲ್ಲ, ಬೀಜಾಡಿಯ ಪ್ರಶಾಂತ್ ಶೆಟ್ಟಿ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರಳೆ, ಪ್ರಮುಖರಾದ ರಾಜು ಪೂಜಾರಿ ಕಾರ್ಕಡ, ಶಿವರಾಮ ಉಡುಪ, ರಾಮಚಂದ್ರ ಉಪಾಧ್ಯ ಮುಂತಾದವರು ಉಪಸ್ಥಿತರಿದ್ದರು.

ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ


ಬೆಂಗಳೂರು: ಕೊರೊನಾ ವೈರಸ್‌ ಮಹಾಮಾರಿ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಎರಡನೇ ಅಲೆ ನಂತರ ಈಗ ಒಮಿಕ್ರಾನ್ ಭಯ ಆರಂಭವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಮಿಕ್ರಾನ್ ನ ಎರಡು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ಈಗ ಬುಡಕ್ಕೆ ಬಂದಿದ್ದು, ಭಯ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಮಾಡಿದ ನಿರ್ಲಕ್ಷ್ಯವನ್ನು ಈಗಲೂ ಮುಂದುವರಿಸದೆ ಕೆಲವೊಂದು ಎಚ್ಚರಿಕೆ ಕ್ರಮಕೈಗೊಂಡಲ್ಲಿ ಕೊರೊನಾದಿಂದ ನಿಮ್ಮನ್ನು ರಕ್ಷಿಸಬಹುದು.

ಒಮಿಕ್ರಾನ್ ನಿಂದ ರಕ್ಷಣೆ ಪಡೆಯುವುದು ಹೇಗೆ? :


ಲಸಿಕೆ : ಭಾರತದಲ್ಲಿ ಲಸಿಕೆ ಅಭಿಯಾನ ಮುಂದುವರೆದಿದೆ, ಭಾರತದ ಅನೇಕರು ಈಗಾಗಲೇ ಲಸಿಕೆ ಪಡೆದಿದ್ದಾರೆ. ಆದರೆ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಪಡೆಯದಿರುವವರು ಅಪಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಹಾಗಾಗಿ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯುವ ಅಗತ್ಯವಿದೆ. ಲಸಿಕೆ ಪಡೆಯದ ಜನರಿಗೆ, ಲಸಿಕೆ ಪಡೆಯುವಂತೆ ಸಲಹೆ ನೀಡುವ ಅಗತ್ಯವೂ ಇದೆ.

ಮಾಸ್ಕ್ ಅಗತ್ಯ : ಕೊರೊನಾದಿಂದ ರಕ್ಷಣೆ ಬೇಕೆಂದರೆ ಮಾಸ್ಕ್ ಕಡ್ಡಾಯ. ಮೊದಲ ಅಲೆಯ ಆರಂಭದಿಂದಲೂ ಮಾಸ್ಕ್ ಮಹತ್ವದ ಬಗ್ಗೆ ವೈದ್ಯರು, ತಜ್ಞರು ಸಲಹೆ ನೀಡುತ್ತಲೇ ಬಂದಿದ್ದಾರೆ. ಕೊರೊನಾ ಎರಡನೇ ಅಲೆ ಮುಗಿದ ನಂತರ ಮಾಸ್ಕ್ ಧರಿಸುವವರ ಸಂಖ್ಯೆ ನಿಧಾನವಾಗಿ ಕಡಿಮೆಯಾಗಿದೆ. ಅನೇಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಇದು ತಪ್ಪು. ಮಕ್ಕಳಿಂದ ಹಿಡಿದು ಎಲ್ಲರೂ ಮನೆಯಿಂದ ಹೊರ ಬೀಳುವಾಗ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.


ಸಾಮಾಜಿಕ ಅಂತರ : ಕೊರೊನಾದ ಈ ಹೊಸ ರೂಪಾಂತರದಿಂದ ಸಮಸ್ಯೆ ತಪ್ಪಿಸಬೇಕಾದರೆ, ಪ್ರತಿಯೊಬ್ಬರೂ ಮೊದಲಿನಂತೆ ಪರಸ್ಪರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗುತ್ತದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಜನಸಂದಣಿ ಇರುವ ಸ್ಥಳಗಳಿಂದ ದೂರವಿರಬೇಕು.

ಕೈಗಳ ಸ್ವಚ್ಛತೆ: ಕೈಗಳನ್ನು ಸಾಬೂನು ಮತ್ತು ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸುತ್ತಿರಬೇಕು. 20 ನಿಮಿಷಗಳ ಕಾಲ ನೀರು ಮತ್ತು ಸಾಬೂನಿನಿಂದ ಕೈಗಳನ್ನು ತೊಳೆಯಬೇಕು. ಹೊರಗೆ ಹೋಗಿ ಮನೆಗೆ ಬಂದ ನಂತ್ರ ಸ್ಯಾನಿಟೈಜರ್ ನಿಂದ ಕೈಗಳನ್ನು ಸ್ವಚ್ಛಗೊಳಿಸಬೇಕು. ಹಾಗೆ ಸ್ನಾನ ಮಾಡುವುದು ಬಹಳ ಮುಖ್ಯ

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಆಯ್ಕೆ



ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2021-23ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಪುನರಾಯ್ಕೆಗೊಂಡಿದ್ದಾರೆ.

ಇತರ ಪದಾಧಿಕಾರಿಗಳಾಗಿ, ಎ.ಶಿವಕುಮಾರ್ (ಉಪಾಧ್ಯಕ್ಷರು); ರಾಜೇಶ್ (ಪ್ರಧಾನ ಕಾರ್ಯದರ್ಶಿ); ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ (ಜತೆ ಕಾರ್ಯದರ್ಶಿಗಳು); ದಯಾನಂದ ಎ. (ಕೋಶಾಧಿಕಾರಿ); ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಸುಧಾಕರ ಎ., ರಮೇಶ್ ಕೋಟ್ಯಾನ್, ವಿಜಯಾ ಜಿ. ಬಂಗೇರ, ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ, ವಿನಯ್ ಕುಮಾರ್, ಭಾಸ್ಕರ್ ಕೋಟ್ಯಾನ್, ಜಯಂತಿ ಹರೀಶ್, ಶಿವಾಜಿ ಸನಿಲ್, ನಿತಿನ್ ಕುಮಾರ್, ವಿನೋದ್ ಪೂಜಾರಿ (ಆಡಳಿತ ಮಂಡಳಿಯ ಸದಸ್ಯರು); ಎ.ಜಬ್ಬ ಪೂಜಾರಿ, ಎ.ಭಾಸ್ಕರ ಪೂಜಾರಿ, ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಸಂಜೀವ ಪೂಜಾರಿ (ಗೌರವ ಸದಸ್ಯರು); ಕೆ.ಮಂಜಪ್ಪ ಸುವರ್ಣ (ಭಜನಾ ಸಂಚಾಲಕರು); ಎ.ಮಾಧವ ಪೂಜಾರಿ ಮತ್ತು ಶಂಕರ ಪೂಜಾರಿ (ಭಜನಾ ಸಹ ಸಂಚಾಲಕರು); ಅವಿನಾಶ್ ಪೂಜಾರಿ, ಜೀವನ್ ಮತ್ತು ಅದಿತ್ (ಅರ್ಚಕರು), ಸಿ.ಎ. ಗಣೇಶ್ ಹೆಬ್ಬಾರ್ ಅಂಬಲಪಾಡಿ (ಗೌರವ ಲೆಕ್ಕ ಪರಿಶೋಧಕರು) ಆಯ್ಕೆಯಾಗಿದ್ದಾರೆ.

ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್


ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಡಿ.1ರಂದು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದ ಅವಧಿಯಲ್ಲಿ ಶಾಸಕರ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕೆಲಸ ಕಾರ್ಯಗಳು ಕಾಪು ಪುರಸಭೆ ಚುನಾವಣೆಯ ಗೆಲುವಿಗೆ ಪೂರಕವೆನಿಸಲಿದೆ.

ಕಾಪು ಪುರಸಭೆ ವ್ಯಾಪ್ತಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯು ಕಾರ್ಯಗತಗೊಳ್ಳಲಿದೆ. ಕ್ಷೇತ್ರದ ಜನತೆ ಯಾವತ್ತೂ ಅಭಿವೃದ್ಧಿ ಪರ ಆಡಳಿತಕ್ಕೆ ಸ್ಪಂದಿಸುತ್ತಾರೆ ವಿನಹ ಕಾಂಗ್ರೆಸ್ ನ ಅಪಪ್ರಚಾರಕ್ಕೆ ಮಣೆ ಹಾಕುವುದಿಲ್ಲ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪಾಲಕೃಷ್ಣ ರಾವ್ ಮಟ್ಟು, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಕ್ಷದ ಪ್ರಮುಖರಾದ ಗಂಗಾಧರ ಸುವರ್ಣ ಉಪಸ್ಥಿತರಿದ್ದರು.

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಸಂಘದ ಅಧ್ಯಕ್ಷರು ಹಾಗೂ 2020-21ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಇವರನ್ನು ಸಂಘದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎ.ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ರಾಜೇಶ್, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಆಡಳಿತ ಸಮಿತಿಯ ಸದಸ್ಯರಾದ ಶಿವದಾಸ್ ಪಿ., ಸುಧಾಕರ್ ಎ., ಕುಶಲ್ ಕುಮಾರ್ ಎ., ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಲಕ್ಷ್ಮಣ ಪೂಜಾರಿ, ಮಹೇಂದ್ರ ಕೋಟ್ಯಾನ್, ಸುಧಾಕರ ಪೂಜಾರಿ, ಗುರುರಾಜ್ ಪೂಜಾರಿ, ಸತೀಶ್ ಜಿ.ಪೂಜಾರಿ, ಜಯಂತಿ ಹರೀಶ್, ವಿನಯ್ ಕುಮಾರ್, ವಿನೋದ್ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Design a site like this with WordPress.com
Get started